Mysore
20
overcast clouds
Light
Dark

ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಗ್ಯಾರೆಂಟಿ ಯೋಜನೆಗಳು ಜಾರಿ: ಸಿದ್ದರಾಮಯ್ಯ

ಶಿವಮೊಗ್ಗ: ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು(ಶುಕ್ರವಾರ) ಶಿವಮೊಗ್ಗದ ಫ್ರೀಡಂ ಪಾರ್ಕ್​ನಲ್ಲಿ ಆರು ನಿರುದ್ಯೋಗಿ ಯುವಕರಿಗೆ ಚೆಕ್‌ಗಳನ್ನು ವಿತರಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ ಚಾಲನೆ ನೀಡಿದರು.

ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚುನಾವಣೆಗಾಗಿ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿಲ್ಲ. ನಿರುದ್ಯೋಗಿ ಯುವಕರಿಗೆ ನೆರವಾಗಬೇಕೆಂಬ ಉದ್ದೇಶದಿಂದಷ್ಟೇ ಈ ಯೋಜನೆ ಜಾರಿಗೊಳಿಸಲಾಗಿದೆ. ದೇಶದಲ್ಲಿ ದಿನಬಳಕೆ, ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಿದೆ. ಜನಸಮಾನ್ಯರಿಗೆ ಖರೀದಿಸುವ ಸಾಮರ್ಥ್ಯವಿಲ್ಲದಂತಾಗಿದೆ ಎಂದರು.

1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ ರೂ.2,000, ಮಹಿಳೆಯರು ಶಕ್ತಿ ಯೋಜನೆಯಡಿ 130 ಕೋಟಿ ಉಚಿತ ಟಿಕೇಟ್ ಪಡೆದು ಪ್ರಯಾಣಿಸಿರುವುದು, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಯನ್ನು 1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಇನ್ನು ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 170 ರೂ.ಗಳನ್ನು ನೀಡಿದ್ದೇವೆ. ಈ ಎಲ್ಲವನ್ನು ಯಾರು ಬೇಕಾದರೂ ಪರಿಶೀಲನೆ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ಮಾಸಿಕ 4 ರಿಂದ 5 ಸಾವಿರ ರೂ.ಗಳು ನೀಡಲಾಗುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿ ರೂ. ಸೇರುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ನೀಡುತ್ತಿವೆ ಎಂದರು.

ಇಂದು ನಮ್ಮ ಸರ್ಕಾರ ಐದನೇ ಗ್ಯಾರಂಟಿಯಾದ ಯುವನಿಧಿಯನ್ನು ಜಾರಿಗೊಳಿಸಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆ ಇದಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು ಎಂದು ಇದೇ ಸಂದರ್ಬದಲ್ಲಿ ಸಿಎಂ ತಿಳಿಸಿದರು.

ರಾಜ್ಯದ ಬೇರೆ ಬೆರೆ ಜಿಲ್ಲೆಗಳಿಂದ ಆಗಮಿಸಿದ ಲಕ್ಷಾಂತರ ಜನ ಯುವ ನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ