Mysore
28
clear sky

Social Media

ಗುರುವಾರ, 06 ಫೆಬ್ರವರಿ 2025
Light
Dark

ಫೆಬ್ರವರಿ ಮೊದಲ ವಾರದಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಹುತಾತ್ಮ ಅರ್ಜುನ ಆನೆಯ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು, ಹಾಸನ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟಿಸಲಾಗುವುದು ಎಂದರು.

ಹುತಾತ್ಮ ಅರ್ಜುನನ ಸ್ಮಾರಕವನ್ನು ಡಿಸೆಂಬರ್.4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನೆರವೇರಿಸುವ ಉದ್ದೇಶ ಇತ್ತು. ಆದರೆ, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರು ಸ್ಮಾರಕ ದರ್ಶನಕ್ಕೆ ಬರಲು ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದರು.‌

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ ಹಿನ್ನೆಲೆಯಲ್ಲಿ ಬಳ್ಳೆಯಲ್ಲೂ ಕೂಡ ಸ್ಮಾರಕ ನಿರ್ಮಿಸಲಾಗಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಲ್ಲಿ ಆ ಸ್ಮಾರಕವನ್ನೂ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.

Tags: