ಬೆಳಗಾವಿ : ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ.
ಸಂತ್ರಸ್ಥ ಮಹಿಳೆಯ ಪುತ್ರ ಪ್ರೀತಿಸಿದ ಯುವತಿಯೊಟ್ಟಿಗೆ ಮನೆ ಬಿಟ್ಟು ಹೋಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿಯ ಮನೆಯವರು ಆತನ ತಾಯಿಯನ್ನು ಬೆತ್ತಲೆಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ.
ಯುವತಿ ಮನೆ ಬಿಟ್ಟು ಹೋಗಿರುವ ವಿಷಯ ತಿಳಿಯುತ್ತಿದ್ದಂತೆ ಆಕೆಯ ಪೋಷಕರು ರಾತ್ರೋ ರಾತ್ರಿ ಆಕೆ ಪ್ರೀತಿಸಿದ ಯುವಕನ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮನೆಯ ಬಾಗಿಲು ಮುರಿದು ಒಳಗೆ ಮನೆಯೊಳಗಿದ್ದ ಮಹಿಳೆಯನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ.
ಸಂತ್ರಸ್ಥ ಮಹಿಳೆಯ ಮಗ ಆದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಇವರ ಪ್ರೀತಿಗೆ ಯುವತಿಯ ಮನೆಯವರ ವಿರೋಧವಿತ್ತು. ಅಷ್ಟೇ ಅಲ್ಲದೇ ಆ ಹುಡುಗಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ಈ ವಿಷಯ ಯುವಕನಿಗೆ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಯುವತಿಯೊಂದಿಗೆ ಪರಾರಿಯಾಗಿದ್ದ. ಇದರಿಂದ ರೊಚ್ಚಿಗೆದ್ದ ಯುವತಿಯ ಕುಟುಂಬಸ್ಥರು ಈ ಅಮಾನವೀಯ ಕೃತ್ಯ ಎಸಗಿದ್ದಾರೆ.
ಹಲ್ಲೆಗೊಳಗಾದ ಮಹಿಳೆಯನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ಹಾಗೂ ಡಿಸಿಪಿ ರೋಹನ್ ಜಗದೀಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮದ ಮಾಜಿ ಅಧ್ಯಕ್ಷ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆಯಾಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಈ ಅಮಾನವೀಯ ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ.





