Mysore
36
few clouds

Social Media

ಗುರುವಾರ, 23 ಏಪ್ರಿಲ 2026
Light
Dark

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ಒಳಮೀಸಲಾತಿ ವರದಿ ಅನುಷ್ಠಾನ ಮಾಡುವ ಸಂಬಂಧ ಸರ್ಕಾರ ತೀರ್ಮಾನ ಕೈಗೊಳ್ಳುವ ಸಂಭವವಿದೆ. ಒಳ ಮೀಸಲಾತಿ ವಿಚಾರವಾಗಿ ಈ ಸಂಪುಟ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಉಪ ಚುನಾವಣೆಯ ಹಿನ್ನೆಲೆಯಲ್ಲಿ ಒಳ ಮೀಸಲಾತಿಯ ಕುರಿತಾದ ನಿರ್ಧಾರ ಮುಂದೂಡಲಾಗಿತ್ತು. ಹೀಗಾಗಿ ನಾಳೆ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಒಳಮೀಸಲಾತಿ ನೀಡುವ ವಿಚಾರವಾಗಿ ಎಡಗೈ ಮತ್ತು ಬಲಗೈ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿದೆ. ಇದು ರಾಜ್ಯ ಸರ್ಕಾರಕ್ಕೆ ತಲೆನೋವು ಉಂಟು ಮಾಡಿದೆ. ಎಸ್‌ಸಿ ಸಮುದಾಯದಲ್ಲಿರುವ 101ಕ್ಕೂ ಹೆಚ್ಚು ಉಪ-ಜಾತಿಗಳಲ್ಲಿ, ಅತಿ ಹೆಚ್ಚು ಹಿಂದುಳಿದಿರುವ ಸಮುದಾಯಗಳಿಗೆ ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಒಳಮೀಸಲಾತಿಯ ಮುಖ್ಯವಾದ ಉದ್ದೇಶವಾಗಿದೆ.

ಮೀಸಲಾತಿಯಲ್ಲಿ ನ್ಯಾಯಯುತ ಪಾಲು ಸಿಗುತ್ತಿಲ್ಲ ಎಂದು ಆರೋಪಿಸಿ, ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಎಡಗೈ ಸಮುದಾಯಗಳು, ಮಾದಿಗ ಮತ್ತು ಇತರ ಉಪ-ಜಾತಿಗಳು ಒತ್ತಾಯಿಸುತ್ತಿವೆ. ಈ ನಿಟ್ಟಿನಲ್ಲಿ ಹೋರಾಟ, ಚಳವಳಿಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಈ ಹಿಂದೆ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು. ಆದರೆ ದಾವಣಗೆರೆ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿತ್ತು.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ. ಎಸ್ ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ 50 ರಿಂದ 56ಕ್ಕೆ ಏರಿಕೆಯಾಗಿದೆ. ಹೆಚ್ಚಳ ಮಾಡಿದ ಪ್ರಮಾಣಕ್ಕೆ ಅನುಗುಣವಾಗಿ ಒಳಮೀಸಲಾತಿ ಕಲ್ಪಿಸಲು ಮಸೂದೆಯನ್ನು ರೂಪಿಸಲಾಗಿದೆ. ಇದಕ್ಕೆ ರಾಜ್ಯಪಾಲರು ಕೂಡಾ ಸಹಿ ಹಾಕಿದ್ದಾರೆ.

ಸಂಪುಟ ಸಭೆ ಏಕೆ?
ಶೇ.17 ಮೀಸಲಾತಿಯಲ್ಲಿ 6:6:5ರಂತೆ ಸರ್ವಸಮ್ಮತದಿಂದ ಒಳಮೀಸಲಾತಿ ಅಳವಡಿಸುವ ಬಗ್ಗೆ ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಒಟ್ಟು ಶೇ.50 ಮೀಸಲಾತಿ ಮಿತಿಯಲ್ಲಿ ಶೇ.15 ಎಸ್‌ಸಿ ಮೀಸಲಾತಿಯಲ್ಲೇ ಒಳಮೀಸಲಾತಿಯನ್ನು ನೀಡುವ ಬಗ್ಗೆ ಚರ್ಚೆ ನಡೆದಿದೆ.

ಎ,ಬಿ,ಸಿ ಒಳಮೀಸಲಾತಿ ವರ್ಗೀಕರಣಕ್ಕೆ ಎಷ್ಟು ಪ್ರಮಾಣದಲ್ಲಿ ಒಳಮೀಸಲಾತಿ ಕಲ್ಪಿಸಬೇಕೆಂಬ ಬಗ್ಗೆ ಚರ್ಚಿಸಿ ತೀರ್ಮಾನಿಸಬೇಕಿದೆ. ಈ ನಿಟ್ಟಿನಲ್ಲಿ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಮತದಾರರು ನಿರ್ಣಾಯಕ ಸಂಖ್ಯೆಯಲ್ಲಿದ್ದಾರೆ. ಒಂದು ವೇಳೆ ಈ ಚುನಾವಣೆಗೂ ಮೊದಲು ಒಳ ಮೀಸಲಾತಿ ಘೋಷಿಸಿದ್ದರೆ ಅದು ವ್ಯತಿರಿಕ್ತ ಪರಿಣಾಮ ಉಂಟಾಗುವ ಆತಂಕವಿತ್ತು. ಹಾಗಾಗಿ, ಉಪಚುನಾವಣೆಯ ಫಲಿತಾಂಶದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರಬಾರದೆಂಬ ಉದ್ದೇಶದಿಂದ ಸಂಪುಟ ಸಭೆ ನಡೆಸಿರಲಿಲ್ಲ.

Tags:
error: Content is protected !!