ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಆಂತರಿಕ ಕಲಹ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಅದನ್ನು ಶಮನ ಮಾಡಲು ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ.
ಬಿಜೆಪಿ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಬಣಗಳ ಬಡಿದಾಟ ನಡೆಯುತ್ತಿದೆ. ಈ ಬಡಿದಾಟವನ್ನು ಶಮನ ಮಾಡಲು ನಾಳೆ(ಜನವರಿ.21) ಕರ್ನಾಟಕಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಭೇಟಿ ನೀಡುತ್ತಿದ್ದು, ಮೂರು ಪ್ರಮುಖ ಸಭೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಮಂಗಳವಾರ(ಜ.21) ಮಧ್ಯಾಹ್ನ 3 ಗಂಟೆಗೆ ಸಂಸದರು ಹಾಗೂ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಪಡೆಯಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬಿಜೆಪಿ ಸಂಘಟನೆ ಪರ್ವದ ಪರಿಶೀಲನೆ ಮಾಡಲಿದ್ದಾರೆ. ಅಲ್ಲದೇ ಈ ವೇಳೆಯೇ ಜಿಲ್ಲಾಧ್ಯಕ್ಷ ಹಾಗೂ ರಾಜ್ಯಾಧ್ಯಕ್ಷ ಚುನಾವಣೆ ಬಗ್ಗೆ ಚರ್ಚಿಸಲಿದ್ದಾರೆ. ಇನ್ನೂ ಸಂಜೆ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯದ ವಿದ್ಯಮಾನಗಳ ಕುರಿತು ಚರ್ಚೆಯಾಗಲಿದೆ. ಇದೇ ಸಂದರ್ಭದಲ್ಲಿ ಮುಖ್ಯವಾಗಿ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳ ಹೇಳಿಕೆಗಲ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.