ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೊರಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಆರ್ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು ನಿಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಧಿಕ್ಕಾರ. ಕ್ರೀಡಾಂಗಣದಲ್ಲಿಯೇ ಆರ್ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಮಾಡಬಹುದಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ವಿಧಾನಸೌಧದ ಮುಂದೆ ಆತುರಾತುರವಾಗಿ ಕಾರ್ಯಕ್ರಮ ಆಯೋಜಿಸಿ, ಆರ್ಸಿಬಿ ತಂಡದ ಜೊತೆ ಸಿಎಂ, ಡಿಸಿಎಂ, ಸಚಿವರು ಮತ್ತವರ ಮಕ್ಕಳ ಫೋಟೋಶೂಟ್ ಶೋಕಿಗೆ ಮುಗ್ಧರು ಪ್ರಾಣ ಕಳೆದುಕೊಂಡಿರುವುದು ಘೋರ ದುರಂತ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹತ್ತಾರು ಸಾವಿರ ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಸೇರಿದ್ದ ವೇಳೆ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವುದು ಕಾಂಗ್ರೆಸ್ ಸರ್ಕಾರ ವೈಫಲ್ಯವನ್ನು ಜಗಜ್ಜಾಹೀರುಗೊಳಿಸಿದೆ. ದುರಂತದಲ್ಲಿ 11 ಜನರ ಸಾವಿಗೆ ಡಿಸಿಎಂ ಡಿಕೆಶಿಯೇ ಹೊಣೆ ಹೊರಬೇಕು ಎಂದು ಆಗ್ರಹಿಸಿದೆ.





