ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಜೆಡಿಎಸ್ ಪಕ್ಷವು, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ ನಡೆದಿದೆ. ಇದು ಅಮಾನವೀಯ ಎಂದು ಹೇಳಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಕಣರೆಯಾಗಿದೆ. ಅಪರಾಧಿಗಳು, ಕಾಮುಕರು, ದರೋಡೆಕೋರರು ಹಾಡಹಗಲೇ ನಿರ್ಭೀತಿಯಿಂದ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ ಎಂದು ಆರೋಪಿಸಿದೆ.
ಗೃಹ ಇಲಾಖೆ ಹೊಣೆ ಹೊತ್ತಿರುವ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದ ರಾಜ್ಯದ ಜನರ ರಕ್ಷಣೆ ಮರೀಚಿಕೆಯಾಗಿದೆ. ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಲೈಂಗಿಕ ಕಿರುಕುಳ, ಅತ್ಯಾಚಾರ, ದರೋಡೆ, ಕೊಲೆ, ಹಲ್ಲೆ, ದೌರ್ಜನ್ಯಗಳಾಗುತ್ತಿದ್ದರೂ ಸರ್ಕಾರ ಗಾಢ ನಿದ್ದೆಯಲ್ಲಿದೆ ಎಂದು ಟೀಕಿಸಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಬರೀ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೃಷಿ ಇಲಾಖೆಯಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ, ಅಬಕಾರಿ ವರ್ಗಾವಣೆ ದಂಧೆ, ಕಾಮಗಾರಿಗಳಲ್ಲಿ ಕಮಿಷನ್ ವ್ಯವಹಾರದಲ್ಲಿ ಸಂಪೂರ್ಣ ತೊಡಗಿದ್ದು, ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದೆ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಎಲ್ಲಾ ವಿಧದಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಹಿಂದಿನ ಸರ್ಕಾರಗಳ ಆಡಳಿತದಲ್ಲಿ ಅತ್ಯಾಚಾರ ಆಗಿಲ್ವಾ ಎನ್ನುವ ಸಿದ್ದರಾಮಯ್ಯ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದೆ.