ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಜೆಡಿಎಸ್ಗೆ ಮೂರು ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಹೇಳಿದ್ದಾರೆ.
ಬಿಜೆಪಿ ಹೈಕಮಾಂಡ್ ಜೆಡಿಎಸ್ ಒತ್ತಾಯಕ್ಕೆ ಮಣಿದಿದ್ದು, ಮಂಡ್ಯ, ಹಾಸನ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಮೂರು ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ಮೈತ್ರಿ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಮಧ್ಯೆ ಹಲವಾರು ಬಿನ್ನಾಭಿಪ್ರಾಯ ಏರ್ಪಟ್ಟಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಬಿಜೆಪಿ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತು ಜೆಡಿಎಸ್ ನಿಂದ ಮಂಡ್ಯ ಕಣದಲ್ಲಿ ಅಭ್ಯರ್ಥಿ ನಿಲ್ಲಿಸುವುದಾಗಿ ಈ ಹಿಂದೆ ಜೆಡಿಎಸ್ ಹೇಳಿತ್ತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಮಾಡುವ ಸಮಾವೇಶಕ್ಕೆ ಆಯಾ ಪ್ರದೇಶದ ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಟಿಕೆಟ್ ಹಂಚಿಕೆ ವೇಳೆಯೂ ಜೆಡಿಎಸ್ ಜತೆ ಸಮಾಲೋಚನೆ ನಡೆಸುತ್ತಿಲ್ಲ ಎಂದು ಜೆಡಿಎಸ್ ನಾಯಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಸದ್ಯ ಈ ಎಲ್ಲಾ ಮನಸ್ತಾಪಗಳಿಗೂ ಈಗ ತೆರೆಬಿದ್ದಿದೆ.
ಈ ನಡುವೆ ಸುಮಲತಾ ಟಿಕೆಟ್ ನೀಡುವ ಕುರಿತು ಮಾತನಾಡಿದ ರಾಧಾ ಮೋಹನ್ ದಾಸ್, ಸುಮಲತಾ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ. ಜೆಡಿಎಸ್ಗೆ ಮಂಡ್ಯ ಟಿಕೆಟ್ ಸಿಕ್ಕರೇ ಸುಮಲತಾ ನಡೆಯೇನು ಎಂಬುದು ಸದ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.