Mysore
27
broken clouds

Social Media

ಭಾನುವಾರ, 25 ಜನವರಿ 2026
Light
Dark

ಕೆ.ಎನ್. ರಾಜಣ್ಣ ಬಿಜೆಪಿಗೆ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ: ಶಾಸಕ ಎಚ್.ಸಿ.ಬಾಲಕೃಷ್ಣ ಸ್ಫೋಟಕ ಹೇಳಿಕೆ

kn rajanna

ಮಾಗಡಿ: ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿಗೆ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಮಂಪರು ಪರೀಕ್ಷೆ ಮಾಡಿದರೆ ಯಾರ ಜೊತೆಯಲ್ಲಿ ಮಾತುಕತೆಯಾಗಿದೆ ಎಂಬುವುದು ತಿಳಿದು ಬರಲಿದೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇಲ್ಲದೇ ಇದ್ದಿದ್ದರೆ ಇಷ್ಟೊತ್ತಿಗೆ ರಾಜಣ್ಣ ಬೇರೆ ಪಕ್ಷಕ್ಕೆ ವಲಸೆ ಹೋಗುತ್ತಿದ್ದರು ಎಂದು ಹೇಳಿದರು.

ಕಾಂಗ್ರೆಸ್‍ನಿಂದ ರಾಜಣ್ಣ ಒಂದು ಕಾಲನ್ನು ಈಗಾಗಲೇ ಹೊರಗಿಟ್ಟಿದ್ದಾರೆ. ಪಕ್ಷ ಬಿಟ್ಟು ಹೋಗುವ ಮುನ್ನ ಡಿ.ಕೆ.ಶಿವಕುಮಾರ್ ಅವರ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದರ ಹಿಂದೆ ಡಿ.ಕೆ.ಶಿವಕುಮಾರ್ ಅವರ ಪಾತ್ರ ಇಲ್ಲ. ಹೈಕಮಾಂಡ್ ನೇರವಾಗಿ ಕ್ರಮ ತೆಗೆದುಕೊಂಡಿದೆ ಎಂದರು.

ಸಚಿವರಾಗಿದ್ದಾಗ ರಾಜಣ್ಣ ಯಾವ ರೀತಿ ನಡೆದುಕೊಂಡಿದ್ದರು? ಅವರ ಮಾತು, ನಡವಳಿಕೆಗಳು ಹೇಗಿದ್ದವು ಎಂದು ಎಲ್ಲರೂ ನೋಡಿದ್ದಾರೆ. ಮಾತು ಮನೆ ಕೆಡಿಸಿತ್ತು. ತೂತು ಒಲೆ ಕೆಡಿಸಿತ್ತು ಎಂಬಂತೆ ರಾಜಣ್ಣ ಅಧಿಕಾರ ಕಳೆದುಕೊಂಡರು. ಇದಕ್ಕೆ ನಮ್ಮ ನಾಯಕರ ಮೇಲೆ ದೂಷಣೆ ಮಾಡುವುದು ಸರಿಯಲ್ಲ ಎಂದರು.

ರಾಜಣ್ಣ ಈಗಾಗಲೇ ಬಿಜೆಪಿಯ ಪ್ರಭಾವಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ದೆಹಲಿ ಮಟ್ಟದಲ್ಲೂ ಚರ್ಚೆಗಳಾಗಿವೆ. ಮಂಪರು ಪರೀಕ್ಷೆಗೊಳಪಡಿಸಿದರೆ, ಯಾರ ಸಂಪರ್ಕದಲ್ಲಿದ್ದಾರೆ ಎಂದು ಗೊತ್ತಾಗಲಿದೆ ಎಂದರು.

Tags:
error: Content is protected !!