ಬೆಂಗಳೂರು : ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು ೧೦೨ ವಿದ್ಯಾರ್ಥಿಗಳಿಗೆ ತಲಾ ೨೫ ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಅನುದಾನ ಕೊರತೆಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಿದ್ದು, ಈ ಬಾರಿಯ ಕೊರತೆ ಅನುದಾನದ ನಡುವೆಯೂ ಈ ವಿಶ್ವವಿದ್ಯಾಲಯಗಳಲ್ಲಿ ೨೦೨೪-೨೫ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿದ್ಯಾರ್ಥಿವೇತನ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ೨೧ ವಿದ್ಯಾರ್ಥಿಗಳು, ಕಾಸರಗೋಡಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ೨೭ ವಿದ್ಯಾರ್ಥಿಗಳು, ಮಹಾರಾಷ್ಟ್ರದ ಸೊಲ್ಲಾಪುರದ ಪುಣ್ಯಶ್ಲೋಕ ಅಹಿಲ್ಯಾದೇವಿ ಹೊಳ್ಕರ ವಿಶ್ವವಿದ್ಯಾಲಯದ ೨೫ ವಿದ್ಯಾರ್ಥಿಗಳು, ಸೊಲ್ಲಾಪುರದ ಸಿಬಿ ಖೇಡಗಿ ಬಸವೇಶ್ವರ ಮಹಾವಿದ್ಯಾಲಯದ ೨೩ ವಿದ್ಯಾರ್ಥಿಗಳು, ಮುಂಬೈ ವಿಶ್ವವಿದ್ಯಾಲಯದ ಇಬ್ಬರು, ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಮೂರು ವಿದ್ಯಾರ್ಥಿಗಳು ಹಾಗೂ ಚನ್ನೈನ ಮದ್ರಾಸು ವಿಶ್ವವಿದ್ಯಾಲಯದ ಒಬ್ಬ ವಿದ್ಯಾರ್ಥಿಗೆ ಒಟ್ಟಾರೆ ೧೦೨ ವಿದ್ಯಾರ್ಥಿಗಳಿಗೆ ತಲಾ ರೂ. ೨೫ ಸಾವಿರದಂತೆ ಒಟ್ಟು ರೂ. ಇಪ್ಪತ್ತೈದು ಲಕ್ಷ ಐವತ್ತು ಸಾವಿರ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದಿರುವ ಬಿಳಿಮಲೆ, ಇದೇ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೂಡಲೇ ರಾಜ್ಯ ಸರ್ಕಾರವು ಹೊರ ನಾಡಿನ ಎಂ.ಎ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾರ್ಥಿವೇತನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಗೆ ಈ ವಿಶ್ವವಿದ್ಯಾಲಯಗಳ ಕನ್ನಡ ವಿಭಾಗಗಳನ್ನು ಸಬಲೀಕರಣಗೊಳಿಸಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.





