ಹಾಸನ: ನಗರದಲ್ಲಿ ಇಂದು ( ಮಾರ್ಚ್ 1 ) ನಗರದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ ಬಳಿಕ ಮಾಧ್ಯಮದವರ ಜತೆ ಮಾತನಾಡಿ ದೇಶದಲ್ಲಿ ಶೇ.18ರಷ್ಟು ಜಿಡಿಪಿ ಬೆಳವಣಿಗೆಯಾಗಿದ್ದು, ಅತಿಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದು ಹೇಳಿಕೆ ನೀಡಿದರು.
ಈ ಬೆಳವಣಿಗೆಗೆ ಗ್ಯಾರಂಟಿ ಯೋಜನೆಗಳ ಫಲ ಎಂಬುದನ್ನು ಅಂಕಿಅಂಶಗಳು ಹೇಳುತ್ತಿವೆ ಎಂದು ಸಹ ಸಿದ್ದರಾಮಯ್ಯ ಹೇಳಿದರು. ಗ್ಯಾರಂಟಿ ಯೋಜನೆಗಳಿಂದ ಖಾತೆಗೆ ಬಂದ ಹಣದಿಂದಾಗಿ ಜನರಲ್ಲಿ ಕೊಳ್ಳುವ ಶಕ್ತಿ, ಉಳಿತಾಯದ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ತೀವ್ರಗೊಂಡು ಆರ್ಥಿಕ ಪ್ರಗತಿ ಕಂಡಿದೆ ಎಂದು ಸಿದ್ದರಾಮಯ್ಯ ತಮ್ಮ ಸರ್ಕಾರದ ಯೋಜನೆಗಳನ್ನು ಸಮರ್ಥಿಸಿಕೊಂಡರು.
ಅಲ್ಲದೇ ಮುಂಬರುವ ಲೋಕಸಭೆ ಚುನಾವಣೆ ಕುರಿತೂ ಸಹ ಮಾತನಾಡಿದ ಸಿದ್ದರಾಮಯ್ಯ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ತಿಳಿಸಿದರು.





