ಸಚಿವಾಲಯ ಹಾಗೂ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು ಹಾಗೂ ನೌಕರರಿಗೆ ರಾಜ್ಯ ಸರ್ಕಾರ ಹಿನ್ನಡೆಯುಂಟಾಗುವಂತಹ ಕ್ರಮ ಕೈಗೊಂಡಿದೆ.
ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನಿವೃತ್ತ ನೌಕರರು ಹಾಗೂ ಅಧಿಕಾರಿಗಳನ್ನು ಈ ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಆದೇಶಿಸಿದ್ದಾರೆ. ಅಲ್ಲದೇ ಆ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳನ್ನೇ ನಿಯೋಜಿಸಲು ಸಹ ಸೂಚಿಸಿದ್ದಾರೆ.
ಇನ್ನು ಈ ರೀತಿಯ ಕ್ರಮಕ್ಕೆ ಸೂಚಿಸಿದ್ದ ಸಿದ್ದರಾಮಯ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಇತರೆ ಇಲಾಖೆ ಮತ್ತು ಸಚಿವಾಲಯಗಳಲ್ಲಿ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿರುವ ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ನೇಮಿಸಲಾಗಿದೆ. ಅಲ್ಲದೇ ಗ್ರೂಪ್ ಹಂತದ ಕೆಲ ಹುದ್ದೆಗಳಿಗೂ ಸಹ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ನೇಮಕ ಮಾಡಿಕೊಂಡ ನಿವೃತ್ತ ನೌಕರರಿಗೆ ವೇತನ, ವಾಹನ ಸೇರಿದಂತೆ ಇನ್ನು ಕೆಲ ಸೌಲಭ್ಯಗಳನ್ನು ನೀಡಲಾಗ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುತ್ತಿದೆ ಎಂದು ಕಾರ್ಯದರ್ಶಿಗೆ ಬರೆದ ಟಿಪ್ಪಣಿಯಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದರು.





