Mysore
31
scattered clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ,? ತಡೆಹಿಡಿದಿದ್ದೇಕೆ.? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ.? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್‌ ತಡೆಹಿಡಿದು ಕನ್ನಡ, ಕರ್ನಾಟಕವನ್ನು ಅಪಮಾನಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುತ್ತೇನೆ.

ಸಿಎಂ ಸಿದ್ದರಾಮಯ್ಯ ವಿಧೇಯಕ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಮೂರು ಬಾರಿ ಯೂ ಟರ್ನ್‌ ಹೊಡೆದು ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿರುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ.

ಅರ್ಹತೆ ಇದ್ದರೂ ಉದ್ಯೋಗವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಸವಾಲು ಹಾಕಿದ್ದಾರೆ.

 

Tags:
error: Content is protected !!