ಉಡುಪಿ: ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಉಡುಪಿಯಲ್ಲಿ ಸಾವಿರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಜ್ಯವನ್ನು ಭ್ರಷ್ಟಾಚಾರದಲ್ಲಿ ನಂಬರ್.1ಗೆ ತಲುಪಿಸಿದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸರ್ಕಾರವಿದ್ದಾಗ ಕರ್ನಾಟಕ ಅಭಿವೃದ್ಧಿಯಲ್ಲಿ 2ನೇ ಸ್ಥಾನದಲ್ಲಿತ್ತು. ಅಭಿವೃದ್ಧಿಯಲ್ಲಿ ಗುಜರಾತ್ ನಂತರ ಕರ್ನಾಟಕ 2ನೇ ಸ್ಥಾನದಲ್ಲಿತ್ತು. ಈಗ ಭ್ರಷ್ಟಾಚಾರದಲ್ಲಿ ನಂಬರ್.1 ತಲುಪಿದೆ. ಇದರ ಕೀರ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲಾ ಕಾರಣ ಸಿಎಂ ಸಿದ್ದರಾಮಯ್ಯ ಅವರೇ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.





