Mysore
28
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಡಿಸೆಂಬರ್.31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸ ವರ್ಷದ ಮುನ್ನ ದಿನವೇ ಲಕ್ಷಾಂತರ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ತೆ ನೌಕರರು ಮುಷ್ಕರ ನಡೆಸಲಿದ್ದಾರೆ.

ಕಳೆದ 36 ತಿಂಗಳಿನಿಂದ ಬಾಕಿ ಉಳಿದಿರುವ 1750 ಕೋಟಿ ರೂಗಳ ಬಾಕಿ ಪಾವತಿ ಬಿಡುಗಡೆ ಮಾಡಬೇಕು. ಮೂಲ ವೇತನಕ್ಕೆ ಶೇಕಡಾ.25ರಷ್ಟು ವೇತನ ಹೆಚ್ಚಿಸಿ, ಶೇಕಡಾ 31ರಷ್ಟು ತುಟ್ಟಿ ಭತ್ಯೆ ವಿಲೀನಗೊಳಿಸಿ ವೇತನ ಶ್ರೇಣಿ ಸಿದ್ಧಪಡಿಸಬೇಕು. ಪ್ರತೀ ತಿಂಗಳು 2000 ರೂ ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಬೇಕು. ಶಕ್ತಿ ಯೋಜನೆಯಿಂದ ಆಗುತ್ತಿರುವ ಶಿಕ್ಷೆ, ಕಿರುಕುಳ ಸಮಸ್ಯೆ ಪರಿಹರಿಸಬೇಕು. ಹೆಚ್ಚುವರಿ ಕೆಲಸದ ಅವಧಿಗೆ ಓಟಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಯಲಿದೆ.

ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಾರಿಗೆ ಇಲಾಖೆ ನೌಕರರು ಈ ಬಾರಿ ಯಾವುದೇ ಕಾರಣಕ್ಕೂ ಬೇಡಿಕೆ ಈಡೇರುವವರೆಗೂ ನಮ್ಮ ಮುಷ್ಕರ ನಿಲ್ಲಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಜನತೆಗೆ ಇದೀಗ ಬಿಗ್‌ ಶಾಕ್‌ ಎದುರಾಗಿದೆ. ಹೊಸ ವರ್ಷಾಚರಣೆ ಆಚರಣೆಗೆ ದೂರದ ಊರುಗಳಿಗೆ ತೆರಳುವವರು ಯೋಚನೆ ಮಾಡಬೇಕಿದೆ.

 

 

Tags:
error: Content is protected !!