ಮೈಸೂರು: ಇಂದು ( ಮೇ 12 ) ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸುವುದರ ಜತೆಗೆ 23 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮೈಸೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಭಾರೀ ಗಾಳಿ, ಗುಡುಗು ಸಹಿತ ಅಬ್ಬರದ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದೆಡೆ ಗುಡುಗು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ನಿನ್ನೆ ( ಮೇ 11 ) ಹುಬ್ಬಳ್ಳಿ – ಧಾರಾವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಮರಗಳು ರಸ್ತೆಗಳಿಗೆ ಉರುಳಿಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ. ನಿನ್ನೆ ಬೆಳಗ್ಗೆ 8.30ಕ್ಕೆ ಅನ್ವಯಿಸುವಂತೆ ಹಿಂದಿನ 24 ಗಂಟೆಗಳಲ್ಲಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ( 9 ಸೆ.ಮೀ ) ಅತಿಹೆಚ್ಚು ಮಳೆಯಾಗಿದ್ದು, ಚಿಕ್ಕಮಗಳೂರು, ಮಾಗಡಿ, ನಾಪೋಕ್ಲು, ಕುಶಾಲನಗರ, ಅಜ್ಜಂಪುರ, ಪಾವಗಡ ಮತ್ತು ಚಿತ್ರದುರ್ಗದಲ್ಲಿಯೂ ಉತ್ತಮ ಮಳೆಯಾಗಿದೆ.
ಹವಾಮಾನ ಇಲಾಖೆ ಮೇ 15ರವರೆಗೂ ಕೊಡಗು, ದಕ್ಷಿಣ ಕನ್ನಡ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ್ದು, ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.