ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್ ಹಾಗೂ ದಾನಪತ್ರವನ್ನು ರದ್ದು ಮಾಡುವ ಅವಕಾಶ ನೀಡಲಾಗಿದೆ. ಅಂತಹವರಿಗೆ ಆಸ್ತಿಯಲ್ಲಿ ಪಾಲಿಲ್ಲ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು(ಮಾರ್ಚ್.12) ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ 2007 ರಲ್ಲಿ ಪೋಷಕರು ಹಾಗೂ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ, ಅಂತೆಯೇ ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಇಲ್ಲವಾದರೆ ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಅದು ಆಗದಿದ್ದಲ್ಲಿ ಹಿರಿಯ ನಾಗರಿಕರು ಸೆಕ್ಷನ್ 9ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.
ತಂದೆ ಮತ್ತು ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಹಾಗೂ ದಾನಪತ್ರವನ್ನು ರದ್ದುಗೊಳಿಸಿ ಪುನಃ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದರು.
ಇನ್ನು ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಅಂತೆಯೇ ಆ ಉಪ ವಿಭಾಗಾಧಿಕಾರಿಗಳ ಮುಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾವಿರಾರೂ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಉಪ ವಿಭಾಗಾಧಿಕಾರಿಗಳೊಂದಿಗೆ ಪ್ರತಿ ತಿಂಗಳು ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೇ ಜಿಲ್ಲಾಧಿಕಾರಿಗಳಿಗೆ ಅರ್ಜಿ ನೀಡಲು ಕೂಡ ಅರ್ಜಿದಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.