ರಾಜ್ಯ

ರೈತರ ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಸಚಿವ ಕೆ.ಜೆ.ಜಾರ್ಜ್

ಕೋಲಾರ: ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳ ಜತೆ ಇಂದು (ಆ.30) ಸಭೆ ನಡೆಸಿದ ಸಚಿವರು, “ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ. 30 ಮತ್ತು ರಾಜ್ಯ ಸರ್ಕಾರದಿಂದ ಶೇ. 50ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ. 20ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು. ರಾಜ್ಯ ಸರ್ಕಾರ ಸಬ್ಸಿಡಿ ಹೆಚ್ಚಿಸಿರುವುದರಿಂದಲೇ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಯೋಜನೆಗೆ ನೋಂದಾಯಿಸಿದ್ದಾರೆ” ಎಂದರು.

“ಅದೇ ರೀತಿ ಕುಸುಮ್ ಸಿ ಫೀಡರ್ ಸೋಲಾರೈಸೇಶನ್ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿ ಸಮೀಪದ ಸಬ್ ಸ್ಟೇಷನ್ ಗೆ ವಿದ್ಯುತ್ ಒದಗಿಸಲಾಗುತ್ತದೆ. ಆಯಾ ಸಬ್ ಸ್ಟೇಷನ್ ವ್ಯಾಪ್ತಿಯಲ್ಲೇ ಆ ವಿದ್ಯುತ್ ಪೂರೈಕೆಯಾಗುವುದರಿಂದ ಗ್ರಾಹಕರಿಗೆ ವಿದ್ಯುತ್ ಸಮಸ್ಯೆ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೋಲಾರ್ ಘಟಕಗಳನ್ನು ಸ್ಥಾಪಿಸಲಾಗುವುದು. ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಮೀನು ಬೇಕಿದ್ದು, ಖಾಸಗಿ ಭೂಮಿಗೆ ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರೂ. ನೀಡಲಾಗುತ್ತದೆ. ಸರ್ಕಾರಿ ಭೂಮಿಯಾದರೆ ಇಂಧನ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಬಳಿ ಪ್ರತಿ ಎಕರೆಗೆ 25 ಸಾವಿರ ರು. ಠೇವಣಿ ಇಟ್ಟು ಆ ಮೊತ್ತವನ್ನು ಆ ಭಾಗದ ಅಂಗನವಾಡಿ, ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ವೆಚ್ಚ ಮಾಡಲಾಗುವುದು,” ಎಂದು ತಿಳಿಸಿದರು.

“ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ. ಅದರ ಸಮರ್ಪಕ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ಸಬ್ ಸ್ಟೇಷನ್ ಗಳ ನಿರ್ಮಾಣ, ಟ್ರಾನ್ಸ್ ಫಾರಂಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ವಿದ್ಯುತ್ ಅಗತ್ಯವಿದ್ದರೆ ವಿದ್ಯುತ್ ಖರೀದಿ ಬದಲು ಇತರೆ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಮಾಡಿಕೊಂಡು ಇಲಾಖೆಗೆ ಹೊರೆಯಾದಗದಂತೆ ನೋಡಿಕೊಳ್ಳಲಾಗುತ್ತಿದೆ,” ಎಂದು ಹೇಳಿದರು.

“ಜಿಲ್ಲೆಯ ಅಂಚಿನಲ್ಲಿ ಇರುವ ಕೆಲವು ಗ್ರಾಮಗಳಲ್ಲಿ ಅವಿರತ ವಿದ್ಯುತ್ ಸಂಪರ್ಕ ಒದಗಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳಾದ ಪವನ ವಿದ್ಯುತ್ ಅಥವಾ ಸೌರ ವಿದ್ಯುತ್ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಳ್ಳಲಾಗುವುದು,” ಎಂದು ಸಚಿವರು ತಿಳಿಸಿದರು.

“ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಗೆ ಅಷ್ಟೊಂದು ಬೇಡಿಕೆ ಇಲ್ಲ. ಇದರ ಹೊರತಾಗಿಯೂ ಸೂರ್ಯ ಘರ್ ಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನ ಜಾಗೃತಿ ಮೂಡಿಸಲಾಗುವುದು” ಎಂದು ಸಚಿವರು ಮಾಹಿತಿ ನೀಡಿದರು.

ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಸಂರ್ಕದಲ್ಲಿರಬೇಕು: ಸಭೆಯಲ್ಲಿ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಾಗ ಪ್ರತಿಕ್ರಿಯಿಸಿದ ಸಚಿವರು, “ಜನತೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರೊಂದಿಗೆ ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರಿಗೆ ಸಮಸ್ಯೆಯ ಬಗ್ಗೆ ಅರಿವಿರುತ್ತದೆ. ಆದ್ದರಿಂದ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂ ಎಂಜಿನಿಯರ್ ಗಳು ತಮ್ಮ ವ್ಯಾಪ್ತಿಯ ಶಾಸಕರ ಜತೆ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಪಡೆದು ಕೆಲಸ ನಿರ್ವಹಿಸಬೇಕು,” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರೂ ಆಗಿರುವ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಾಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸೇರಿದಂತೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

2 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

2 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

2 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

2 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

2 hours ago