ಉಡುಪಿ: ಹಿಂದಿನಂತೆ ಈ ಬಾರಿಯೂ ಕೂಡ ಮಂಡ್ಯ ಲೋಕಸಭೆ ಚುನಾವಣೆ ಅಖಾಡ ಬಾರಿ ಕುತೂಹಲ ಮೂಡಿಸಿದೆ. ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಕಣದಲ್ಲಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ ಕ್ಷೇತ್ರದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಈ ಬಗ್ಗೆ ಇಂದು (ಏ.19) ಉಡುಪಿಯಲ್ಲಿ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ʼಸುಮಲತಾ ಅವರೇ ದರ್ಶನ್ ಅವರನ್ನು ಪ್ರಚಾರಕ್ಕೆ ಕಳಿಸಿದ್ದಾರೆ ಎನ್ನುವುದು ಊಹಾಪೋಹ. ಇದರಲ್ಲಿ ಸೆನ್ಸ್ ಲಾಜಿಕ್ ಎರಡೂ ಇಲ್ಲ. ದರ್ಶನ್ ಅವರನ್ನು ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ನಿಂತಿದ್ದರೆ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು. ಯಾರ ಪರ ಪ್ರಚಾರ ಮಾಡಬೇಕು ಎನ್ನುವುದು ಅವರ ಇಚ್ಛೆ. ಹೋಗು ಹೋಗಬೇಡ ಎನ್ನಲು ನಾನು ಯಾರು? ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಮದ್ದೂರಿನಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಹಾಗೆಯೇ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರಕ್ಕೆ ಹೋಗಿದ್ದರು. ಪಕ್ಷ ಮುಖ್ಯ ಅಲ್ಲ. ನಿಂತಿರುವ ವ್ಯಕ್ತಿ ಮುಖ್ಯ ಎಂದು ದರ್ಶನ್ ಹೇಳುತ್ತಾ ಬಂದಿದ್ದಾರೆʼ ಎಂದು ಸುಮಲತಾ ಅಂಬರೀಶ್ ತಿಳಿಸಿದರು.
ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಪರ ಪ್ರಚಾರದಲ್ಲಿ ಭಾಗವಹಿಸದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ʼನಾನಾಗಿಯೇ ಎಲ್ಲಿಗೂ ಹೋಗಿಲ್ಲ. ಪಕ್ಷ ಹೇಳಿದರೆ ಹೆಚ್ ಡಿಕೆ ಪರ ಪ್ರಚಾರ ಮಾಡುತ್ತೇನೆʼ ಎಂದರು.





