eshwar khandre
ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮೈಸೂರು ವಿಭಾಗದ ಅರಣ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ಈಗಾಗಲೇ ವನ್ಯಜೀವಿ ಮಂಡಳಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ತಿಳಿಸಿದರು.
ಅರಣ್ಯ ಪ್ರದೇಶದೊಳಗೆ ಇರುವ ಹಾಡಿಗಳಲ್ಲಿರುವ ದನಕರುಗಳೆಷ್ಟು, ಈ ಹಾಡಿಗಳಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆ ಸಂಪೂರ್ಣ ದತ್ತಾಂಶ ಕಲೆ ಹಾಕಿ ದಾಖಲಿಸಲು ಮತ್ತು ಒಂದೊಮ್ಮೆ ಹಾಡಿಯಲ್ಲಿರುವ ದನಕರುಗಳು ವನ್ಯಜೀವಿಯಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.
ಜಾಗೃತಿ ಮೂಡಿಸಿ:
ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮದ ಅಂಚಿನ ಗ್ರಾಮಗಳಲ್ಲಿ ಮತ್ತು ಅರಣ್ಯದ ಹಾಡಿಯ ಬಳಿ ವನ್ಯಜೀವಿಗಳಿಗೆ ವಿಷ ಹಾಕುತ್ತಿರುವ ಘಟನೆಗಳು ಮತ್ತು ಕಳ್ಳಬೇಟೆ ಪ್ರಕರಣಗಳು ವರದಿಯಾಗುತ್ತಿದ್ದು, ಅರಣ್ಯವಾಸಿಗಳು ಮತ್ತು ಕಾಡಿನಂಚಿನ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುವಂತೆ ಹಾಗೂ ವನ್ಯಜೀವಿಗಳಿಂದ ಬೆಳೆ ಹಾನಿ ಆಗಿದ್ದಲ್ಲಿ ಪರಿಶೀಲಿಸಿ, ಪರಿಹಾರ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮೂಲಸೌಕರ್ಯ ಒದಗಿಸಲು ಸೂಚನೆ:
ಹೊರಗುತ್ತಿಗೆಯ ಮುಂಚೂಣಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿ ಆಗುತ್ತಿದೆಯೇ ಇಲ್ಲವೇ, ಇವರು ಸರಿಯಾಗಿ ಗಸ್ತು ನಡೆಸುತ್ತಿದ್ದಾರೋ ಇಲ್ಲವೋ, ಎಂಸ್ಟ್ರೈಪ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಸಚಿವರು ಸೂಚಿಸಿದರು.
ಸಿಬ್ಬಂದಿ ಗಸ್ತು ತಿರುಗುತ್ತಿರುವ ಕುರಿತಂತೆ ಜಿಪಿಎಸ್ ಸಹಿತ ಫೋಟೋ ತೆಗೆಯಲು ಸೂಚಿಸಿ, ಅದನ್ನು ಹಿರಿಯ ಅಧಿಕಾರಿಗಳು ಆಗಾಗ್ಗೆ ಪರಾಮರ್ಶಿಸಬೇಕು, ಜೊತೆಗೆ ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದೂ ಈಶ್ವರ ಖಂಡ್ರೆ ತಿಳಿಸಿದರು.
ಇದನ್ನೂ ಓದಿ:-ಹುಲಿ ಹತ್ಯೆ ಪ್ರಕರಣ : ಓರ್ವ ವ್ಯಕ್ತಿ ವಶಕ್ಕೆ
ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿರುವ ಸಿಬ್ಬಂದಿಗೆ ಬೂಟು, ಜಾಕೆಟ್, ಕುಡಿಯುವ ನೀರು, ಆಹಾರ ಧಾನ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲೂ ಸಚಿವರು ಸೂಚನೆ ನೀಡಿದರು.
ಚನ್ನಪಟ್ಟಣ ಆನೆ ಸಾವಿನ ಬಗ್ಗೆ ಪರಾಮರ್ಶೆ:
ಚನ್ನಪಟ್ಟಣದ ಗೊಲ್ಲರದೊಡ್ಡಿಯ ಬಳಿ ಇಂದು ತೆಂಗಿನಮರದ ಹೊಂಬಾಳೆ ತಿನ್ನಲು ಯತ್ನಿಸಿದ ಆನೆಯೊಂದು ಪಕ್ಕದಲ್ಲಿದ್ದ ವಿದ್ಯುತ್ ಕಂಬದ ತಂತಿ ಸ್ಪರ್ಶದಿಂದ ಮೃತಪಟ್ಟಿರುವ ಕುರಿತಂತೆಯೂ ಸಭೆಯಲ್ಲಿ ಪರಾಮರ್ಶಿಸಲಾಯಿತು.
ಪ್ರತಿ ವರ್ಷ ಸರಾಸರಿ ವಿದ್ಯುತ್ ಸ್ಪರ್ಶದಿಂದ 14 ಆನೆಗಳು ಮೃತಪಡುತ್ತಿವೆ. ಆದರೆ ಈ ವರ್ಷ 7 ಆನೆಗಳು ಮಾತ್ರ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿವೆ. ರೈತರಿಗೆ, ತೋಟದ ಮಾಲೀಕರಿಗೆ ಬೇಲಿಯ ತಂತಿಗೆ ಅಕ್ರಮವಾಗಿ ವಿದ್ಯುತ್ ಹರಿಸದಂತೆ ಮನವಿ ಮಾಡಲಾಗಿದೆ. ತಪಾಸಣೆ ನಡೆಲಾಗುತ್ತಿದೆ ಎಂದೂ ಸಭೆಗೆ ಅಧಿಕಾರಿಗಳು ತಿಳಿಸಿದರು.
ಆನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗದಂತೆ ಹಾಗೂ ಅರಣ್ಯ ಪ್ರದೇಶದಲ್ಲಿ ಅಥವಾ ಅರಣ್ಯದಂಚಿನಲ್ಲಿ ತೂಗಾಡುತ್ತಿರುವ ಅಥವಾ ಜೋತು ಬಿದ್ದಿರುವ ವಿದ್ಯುತ್ ತಂತಿಯ ದುರಸ್ತಿ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪತ್ರ ಬರೆದು ಕ್ರಮ ವಹಿಸಲು ಸೂಚಿಸುವಂತೆ ತಿಳಿಸಿದರು.
ಸಭೆಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ ಮತ್ತಿತರರು ಪಾಲ್ಗೊಂಡಿದ್ದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…