Mysore
19
few clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ನಾಳೆಯಿಂದ ಮುಂಗಾರು ಅಧಿವೇಶನ: ಬಿಜೆಪಿ, ಜೆಡಿಎಸ್‌ ಕೈಯಲ್ಲಿ ಹಲವು ಅಸ್ತ್ರಗಳು

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ನಾಳೆಯಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಾಗಿವೆ.

ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸದನದ ಹೊರಗೆ ಒಂದಾಗಿ ಹೋರಾಟ ನಡೆಸುತ್ತಿರುವ ಬಿಜೆಪಿ-ಜೆಡಿಎಸ್‌ ಸದನದ ಒಳಗೂ ಸಹ ಸರ್ಕಾರದ ವಿರುದ್ಧ ಒಂದಾಗಲಿವೆ.

ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಬಿಜೆಪಿಯ ಬಸವರಾಜ ಬೊಮ್ಮಾಯಿ, ಜೆಡಿಎಸ್‌ನ ಎಚ್‌.ಡಿ.ಕುಮಾರಸ್ವಾಮಿ, ಕಾಂಗ್ರೆಸ್‌ನ ಇ ತುಕಾರಾಂ, ವಿಧಾನ ಪರಿಷತ್‌ ಸದಸ್ಯ ಬಿಜೆಪಿಯ ಕೋಟಾ ಶ್ರೀನಿವಾಸ್‌ ಪೂಜಾರಿ ಶಾಸಕ ಮತ್ತು ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಅವರುಗಳಿಲ್ಲದೇ ಮೊದಲ ಅಧಿವೇಶನ ನಡೆಯುತ್ತಿದೆ.

ವಿಧಾನಸಭೆ ಪ್ರತಿಪಕ್ಷದ ಸಾಲಿನಿಂದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ನಿರ್ಗಮಿಸಿದ್ದಾರೆ. ಆದ್ದರಿಂದ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.

ಇನ್ನೂ ಮುಂಗಾರು ಅಧಿವೇಶನ ಕಾವೇರುವ ಎಲ್ಲಾ ಸೂಚನೆ ಸಿಕ್ಕಿದ್ದು, ಪ್ರತಿಪಕ್ಷಗಳ ಕೈಯಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅನೇಕ ಅಸ್ತ್ರಗಳಿವೆ. ಈಗಾಗಲೇ ಕಾಂಗ್ರೆಸ್‌ ಸರ್ಕಾರ ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾರೀ ಮುಜುಗರ ಅನುಭವಿಸಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷಗಳು ಟಾರ್ಗೆಟ್‌ ಮಾಡುತ್ತಿವೆ. ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರು ಇಡಿಯಿಂದ ಬಂಧನಕ್ಕೆ ಒಳಗಾಗಿದ್ದು, ಕಾಂಗ್ರೆಸ್‌ಗೆ ಸಂಕಷ್ಟ ತಂದಿದೆ.

ಇದಲ್ಲದೇ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ, ಕೆ.ಸುಧಾಕರ್‌ ರಾವ್‌ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಲು ಸರ್ಕಾರ ವಿಳಂಬ ಮಾಡುತ್ತಿರುವುದು ಮುಂತಾದ ವಿಚಾರಗಳು ಸದನದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗುವ ನಿರೀಕ್ಷೆಯಿದೆ.

 

Tags:
error: Content is protected !!