ಬೆಂಗಳೂರು : ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಣಕ್ಕೆ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಾವೇರಿ ನದಿ ಮತ್ತು ಲಕ್ಷ್ಮಣ ತೀರ್ಥ ನದಿ ಒಳಗೊಂಡಂತೆ ನೀರಿನ ಮಾಲಿನ್ಯದ ತಡೆಗೆ ತುರ್ತು ಮಾರ್ಗೋಪಾಯಗಳನ್ನು ಕೈಗೊಳ್ಳುವ ಸಂಬಂಧ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವರ ಈಶ್ವರ್ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ಗುರುವಾರ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಡಾ.ಡಿ. ತಿಮ್ಮಯ್ಯಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಸಮಿತಿ ವರದಿ ಕುರಿತು ಸರ್ಕಾರ ಪರಿಶೀಲಿಸುತ್ತಿದ್ದು, ಅದರ ಅನ್ವಯ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಲಕ್ಷ್ಮಣ ತೀರ್ಥ ನದಿಗೆ ಹುಣಸೂರು ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿನ ಕಲುಷಿತ ನೀರು ಸೇರದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ತಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗುತ್ತಿದೆ. ಪ್ರತಿ ತಿಂಗಳೂ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ನದಿ ನೀರು ಕುಡಿಯಲು ಯೋಗ್ಯವಾಗಿದೆ ಎಂದು ದೃಢಪಟ್ಟಿದೆ ಎಂದರು.





