Mysore
17
clear sky

Social Media

ಸೋಮವಾರ, 19 ಜನವರಿ 2026
Light
Dark

ಸಾಲ ಪಡೆದವರ ಹಿತ ಕಾಪಾಡಲು ಬದ್ಧ; ಸಿಎಂ

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲು ಚಿಂತಿಸಲಾಗಿದೆ ಎಂದರು.

ಸ್ವಯಂ ಪ್ರೇರಿತ ದೂರು ದಾಖಲು
ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮವಹಿಸಲಾಗುವುದು. ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ಮಾಡಲಾಗುವುದು. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಿ, ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆ ನಡೆಸಿ
ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ. ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಹೇಳಿದರು.

ಸಹಾಯವಾಣಿ ಆರಂಭ
ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಲಾಗಿದೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚಸಿಲಾಗಿದೆ ಎಂದರು.

Tags:
error: Content is protected !!