ಹಾಸನ: ಹಾಲಿನ ದರ 4 ರೂ. ಏರಿಕೆಯ ಸರ್ಕಾರದ ನಿರ್ಧಾರದಿಂದ ಹಾಮೂಲ್ ಹಾಗೂ ಮಾರಾಟವಾಗದ ಹಾಲಿಗೂ ನೀಡುವ ಬಟವಾಡೆಯಿಂದ ಮಾಸಿಕ 9 ಕೋಟಿ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ, ಸರ್ಕಾರದ ಕಾರ್ಯದರ್ಶಿ ಹಾಗೂ ಕೆಎಂಎಫ್ಗೆ ಎರಡು ಬಾರಿ ಪತ್ರ ಬರೆದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.
ಒಟ್ಟಾರೆ 3.18 ಲಕ್ಷ ಲೀಟರ್ ಉತ್ಪನ್ನಗಳು ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರಾಟವಾಗುತ್ತಿವೆ. ಆದರೆ, ಉಳಿದ 9.40 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ. ಇನ್ನೊಂದು ತಿಂಗಳಲ್ಲಿ 2.5 ಲಕ್ಷ ಲೀಟರ್ ಹಾಲು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೇವಣ್ಣ ಹೇಳಿದ್ದಾರೆ.
4 ರೂ. ದರ ಹೆಚ್ಚಳ ಮಾಡಿ ಹಾಲು ಉತ್ಪಾದಕರಿಗೆ ನೀಡುವುದರಿಂದ ಹಾಸನ ಹಾಲು ಒಕ್ಕೂಟಕ್ಕೆ ದಿನಕ್ಕೆ 36 ಲಕ್ಷ ರೂಪಾಯಿ ಮತ್ತು ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟವಾಗುತ್ತದೆ. ಇದು ಒಕ್ಕೂಟದ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
“ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟದಲ್ಲಿ ಹಾಲು ಮಾರಾಟ ಮಾಡುವುದು ಸಾಧ್ಯವೇ? ಈ ವಸ್ತುಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ” ಎಂದರು.





