ಮಂಗಳೂರು: ಕೊಲೆಯಾದ ಪ್ರತಿಯೊಬ್ಬರ ಮನೆಗೂ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಟಾಂಗ್ ನೀಡಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು ಆಗುತ್ತಲೇ ಇರುತ್ತವೆ. ಆದರೆ ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದು ಮುಖ್ಯ ಅಷ್ಟೇ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಿದೆ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ. ಯಾರು ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಿದ್ದಾರೆ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಬಿಜೆಪಿಯವರು ಊಹಾಪೋಹದ ಹೇಳಿಕೆ ನೀಡುವುದನ್ನು ಬಿಟ್ಟು ತಮ್ಮ ಬಳಿ ಸ್ಪಷ್ಟ ಮಾಹಿತಿ ಇದ್ದರೆ ನೀಡಲಿ ಎಂದು ತಿರುಗೇಟು ಕೊಟ್ಟರು.




