ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗುತ್ತಿಗೆದಾರರ ಹತ್ತಿರ ಕಮಿಷನ್ ಪಡೆದಿದ್ದರೆ, ಸಾಕ್ಷಿ ಆಧಾರ ಇಟ್ಟುಕೊಂಡು ಅವರು ಮಾಡಿರುವ ಆರೋಪವನ್ನು ಸಾಬೀತು ಮಾಡಲಿ. ಅದನ್ನು ಬಿಟ್ಟು ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆದ ಹಾಗೇ ಮಾತನಾಡುವುದಲ್ಲ ಎಂದು ಕಿಡಿಕಾರಿದ್ದಾರೆ.
ಗುತ್ತಿಗೆದಾರರು ಮಾಡಿರುವ ಕೆಲಸಕ್ಕೆ ರಾಜ್ಯ ಸರ್ಕಾರ 38 ಸಾವಿರ ಕೋಟಿ ಬಾಕಿ ಇರಿಸಿಕೊಂಡಿದೆ ಎಂದು ಹೇಳ್ತಾರೆ. ಎಲ್ಲಿದೆ ಬಾಕಿ? ಬಿಜೆಪಿ 10 ಸಾವಿರ ಕೋಟಿ ಮಂಜೂರು ಮಾಡಿ ಸುಮ್ಮನೆ ಹೊರಟು ಹೋಯಿತು. ಈಗ ಆರೋಪ ಮಾಡಿದರೆ ಹೇಗೆ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.





