ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಚಿವೆ ಬೆಂಬಲಿಗರು ಸಿ.ಟಿ.ರವಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸುತ್ತಿದ್ದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕಾರನ್ನು ಸುತ್ತುವರಿದಿದ್ದಾರೆ. ಸುವರ್ಣ ಸೌಧದ ಕಾರಿಡಾರ್ ಸಮೀಪಿಸುತ್ತಿದ್ದಂತೆಯೇ ಏಕಾಏಕಿ ನೂರಕ್ಕು ಹೆಚ್ಚು ಬೆಂಬಲಿಗರು ಸಿ.ಟಿ ರವಿ ಕಡೆ ನುಗ್ಗಿ ಹಲ್ಲೆಗೆ ಯತ್ನಿಸಿದರು. ಈ ವೇಳೆ ಪೊಲೀಸರು ಸುತ್ತುವರಿದ ರಕ್ಷಣೆ ನೀಡಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ 30 ಕ್ಕೂ ಹೆಚ್ಚು ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ.
ನಂತರ ಕಾರಿಡಾರ್ನಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಾ ಮಾತನಾಡಿದ ಸಿ.ಟಿ. ರವಿ, ಹೆಬ್ಬಾಳ್ಕರ್ ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿದ್ದಾರೆ. ಈ ಕಾರಣಕ್ಕಾಗಿ ಅವರ ಬೆಂಬಲಿಗರು ಮುತ್ತಿಗೆ ಹಾಕಿ ಕೊಲ್ಲಲು ಪ್ರಯತ್ನಿಸಿದ್ದಾರೆ. ಇದಕ್ಕೆ ನಾನು ಹೆದರಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದರು.
ಸಿ.ಟಿ. ರವಿ ಅವರ ಪ್ರತಿಭಟನೆಗೆ ಮಲ್ಲೇಶ್ವರಂ ಶಾಸಕ ಸಿಎನ್ ಅಶ್ವಥ್ ನಾರಾಯಣ್ ಅವರು ಸಾಥ್ ನೀಡಿದ್ದರು. ನಂತರ ಪೊಲೀಸರು ಮನವೋಲಿಸಿ ಅವರನ್ನು ಅಲ್ಲಿಂದ ಕರೆದೊಯ್ದರು.





