ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇದೊಂದು ಸಮತೋಲಿತ ಬಜೆಟ್ ಆಗಿದ್ದು, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ವರನ್ನು ಒಳಗೊಂಡ ಚಾರಿತ್ರಿಕ 2026-27ನೇ ಸಾಲಿನ ಆಯವ್ಯಯ ರೂಪಿಸಲಾಗಿದೆ. ಬಜೆಟ್ನಲ್ಲಿ ಕೃಷಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದ್ದು, ರೈತರ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಕೃಷಿ ಮತ್ತು ತೋಟಗಾರಿಕೆಗೆ ರೂ. 8373 ಕೋಟಿ ಮೀಸಲಿಡಲಾಗಿದ್ದು, ಬಡವರು ಜನಸಾಮಾನ್ಯರಿಗೆ ಇನ್ನಷ್ಟು ಶಕ್ತಿ ತುಂಬುವಂತಹ ಅತ್ಯಂತ ಕಡಿಮೆ ತೆರಿಗೆಯ ಬಜೆಟ್ ಇದಾಗಿದೆ. ಶಿಕ್ಷಣ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ನೀರಾವರಿ, ವಸತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಆಧ್ಯತೆ ನೀಡಿ ಅನುದಾನ ಮೀಸಲಿರಿಸುವುದು ಸ್ವಾಗತಾರ್ಹ. ಕೃಷಿ, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ಶೇಕಡಾ 13ರಷ್ಟು ಅನುದಾನ ಮೀಸಲಿರಿಸಿದೆ. ಎಲ್ಲಾ ಸಮಾಜಕ್ಕೂ ಬದುಕಿನ ಉನ್ನತೀಕರಣಕ್ಕೆ ಬೇಕಾಗುವಂತಹ ನೆರವು ಮತ್ತು ಪ್ರೋತ್ಸಾಹವನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಮಂಡಿಸಲಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.





