ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಡಾ.ಚಂದ್ರು ಲಮಾಣಿ ಅವರಿಗೆ ಸೇರಿದ ಖಾಸಗಿ ಆಸ್ಪತ್ರೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಮಿಷನ್ ಪಡೆಯುತ್ತಿದ್ದ ಚಂದ್ರು ಲಮಾಣಿ ಮತ್ತು ಅವರ ಸರ್ಕಾರಿ ಆಪ್ತ ಕಾರ್ಯದರ್ಶಿ ಮಂಜುನಾಥ್ ತಳವಾರ, ಖಾಸಗಿ ಆಪ್ತ ಕಾರ್ಯದರ್ಶಿ ಗುರು ಲಮಾಣಿ ಅವರನ್ನು ಬಂಧಿಸಿದ್ದರು.
ಶನಿವಾರ ಮುಂಗಡವಾಗಿ ಐದು ಲಕ್ಷ ರೂಪಾಯಿ ಹಣ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ಇಂದು ಬೆಂಗಳೂರಿನಲ್ಲಿ ನ್ಯಾಯಾಧೀಶರ ಮುಂದೆ ಚಂದ್ರು ಲಮಾಣಿ ಅವರನ್ನು ಹಾಜರುಪಡಿಸಲಾಗಿದ್ದು, ಮಾರ್ಚ್.3ರವರೆಗೆ ಚಂದ್ರು ಲಮಾಣಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಚಂದ್ರು ಲಮಾಣಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.





