ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸಹಾಯದಿಂದ ಸಂಚಾರ ನಿಯಮ ಉಲ್ಲಂಘನೆ ಮೇಲೆ ನಿಗಾ ಇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಚಾಲನೆ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ. ಎನ್ಸಿಆರ್ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದಲೇ ಹೆಚ್ಚು ಮರಣ ಉಂಟಾಗಿದೆ. ಆದ್ದರಿಂದ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಬೇಕು ಎಂದು ಸಲಹೆ ನೀಡಿದರು.
ಈ ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ ನೀಡಲು ಹರೀಶ್ ಸಾಂತ್ವನ ಯೋಜನೆ ಜಾರಿಗೆ ತಂದಿತ್ತು. ಆದರೆ ಅಪಘಾತವಾಗಿ ಹೋದ ಜೀವ ಮತ್ತೆ ಮರಳಿ ತರಲು ಸಾಧ್ಯವೇ? ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವುದು, ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸುವುದರಿಂದ ಏನೂ ಪ್ರಯೋಜನವಿಲ್ಲ ಎಂದರು.
ಇನ್ನೂ ಪಾದಚಾರಿಗಳ ಅನುಕೂಲ, ಸುಗಮ ಸಂಚಾರಕ್ಕಾಗಿ ಹೈಕೋರ್ಟ್ ಆದೇಶದಂತೆ ಪಾದಚಾರಿ ಮಾರ್ಗ ವ್ಯಾಪಾರಿಗಳನ್ನು ತೆರವು ಮಾಡಲಾಗಿದೆ. ಪಾದಚಾರಿ ಮಾರ್ಗ ಇರುವುದು ಜನ ಓಡಾಡಲು. ಇಂತಹ ವ್ಯಾಪಾರಿಗಳು ನೋಂದಣಿ ಮಾಡಿಕೊಂಡು ರಸ್ತೆಯ ಒಂದು ಕಡೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಅವರಿಗೆ ಆರ್ಥಿಕ ನೆರವು ನೀಡಲು ನಾವು ಸಿದ್ಧ. ಆದರೆ ಪಾದಚಾರಿ ಮಾರ್ಗದಲ್ಲಿ ಟೆಂಟ್ ಹಾಕಿಕೊಂಡು ವ್ಯಾಪಾರ ಮಾಡಬಾರದು ಎಂದಯ ಸಲಹೆ ನೀಡಿದರು.





