Mysore
25
scattered clouds

Social Media

ಶನಿವಾರ, 16 ಮೇ 2026
Light
Dark

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾಜಿ ಪ್ರಧಾನಿಗಳು ಮಾತನಾಡಿದರು.

ರೈತರ ಭೂಮಿಯನ್ನು ಕಿತ್ತುಕೊಂಡು ದಂಧೆ ಮಾಡಲು ಈ ಸರ್ಕಾರ ಹೊರಟಿದೆ. ಒಬ್ಬರು ‘ರೈತರು ಹೊಡೆದರೆ ಹೊಡೆಸಿಕೊಳ್ಳುವೆ’ ಎಂದು ಹೇಳಿದ್ದಾರೆ. ಮೊದಲು ಅವರು ಹೋಗಿ ರೈತರಿಂದ ಹೊಡೆಸಿಕೊಂಡು ಬರಲಿ, ಆಮೇಲೆ ನಾನು ಹೋಗಿ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ದೇವೇಗೌಡರು ಈ ಹಿಂದೆ ಸಭೆಯಲ್ಲಿ ಅಳುತ್ತಿದ್ದರು ಎಂದು ಕೆಲವರು ವ್ಯಂಗ್ಯ ಮಾಡುತ್ತಿದ್ದರು. ಆದರೆ ಈ ವ್ಯವಸ್ಥೆಯನ್ನು ನೋಡಿ ನಾನು ನಗುತ್ತಿದ್ದೇನೆ. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಸ್ನೇಹಿತರು ಮತ್ತು ಹಳೆಯ ಸಹೋದ್ಯೋಗಿ. ಜೊತೆಯಲ್ಲಿ ಕೆಲಸ ಮಾಡಿದ್ದೇವೆ. ಆದರೆ ಇಲ್ಲಿ ನಡೆಯುತ್ತಿರುವುದು ಯಾರಿಗೂ ಕಾಣದಿರುವುದು ನನಗೆ ಅತೀವ ನೋವು ತಂದಿದೆ ಎಂದು ಮಾಜಿ ಪ್ರಧಾನಿಗಳು ಬೇಸರ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗಿದ್ದಾರೆ. ಇವತ್ತು ನಾನು ಒಂದು ಇಂಗ್ಲೀಷ್ ಪೇಪರ್ ನೋಡಿದೆ. ಕುಮಾರಸ್ವಾಮಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ ಎಂದು ಒಬ್ಬ ವ್ಯಕ್ತಿ ಹೇಳಿರುವ ವರದಿಯನ್ನು ಗಮನಿಸಿದೆ. ಕುಮಾರಸ್ವಾಮಿ ಮಾಡಿದ ಬಿಡದಿ ಟೌನ್ಶಿಪ್ ಅನ್ನು ನಾನು ಮಾಡುತ್ತಿದ್ದೇನೆ ಎಂದು ಆ ವ್ಯಕ್ತಿ ಹೇಳಿದ್ದಾರೆ. ಆಗ ಕುಮಾರಸ್ವಾಮಿ ಮಾಡಲು ಹೊರಟಿದ್ದು ಏನು? ಈ ವ್ಯಕ್ತಿ ಈಗ ಮಾಡುತ್ತಿರುವ ದಂಧೆ ಏನು ಎಂಬುದು ಜನರಿಗೆ ಅರ್ಥವಾಗಿದೆ. ಅದರ ವಿರುದ್ಧ ನಾನು ಹೋರಾಟ ಮಾಡುತ್ತೇನೆ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಮೇಲೆ ಹೆಚ್ಚು ಒತ್ತಡ ಆಗುತ್ತದೆ ಎಂದು ಕುಮಾರಸ್ವಾಮಿ ಐದು ಟೌನ್ ಶಿಪ್ ಗಳನ್ನು ಮಾಡಲು ಹೊರಟಿದ್ದರು. ಆಗ ಕಾಂಗ್ರೆಸ್ ಪಕ್ಷದ ನಾಯಕರು ದೊಡ್ಡ ಅಪಪ್ರಚಾರ ನಡೆಸಿ ಕುಮಾರಸ್ವಾಮಿಯವರು ಭೂಮಿಯನ್ನು ಹೊಡೆಯಲು ಹೊರಟಿದ್ದಾರೆ ಎಂದು ಸತ್ಯಶೋಧನ ಸಮಿತಿ ರಚಿಸಿ ತನಿಖೆಯನ್ನು ಮಾಡಿದರು. ಅವರ ಸತ್ಯಶೋಧನ ಸಮಿತಿ ವರದಿಯಲ್ಲಿ ಯಾವ ಸತ್ಯ ಹೊರಗೆ ಬಂತು ದೇವರೇ ಬಲ್ಲರು ಎಂದು ಮಾಜಿ ಪ್ರಧಾನಿಗಳು ವ್ಯಂಗ್ಯವಾಡಿದರು.

ಅಂದು ಜನರು ವಿರೋಧ ಮಾಡಿದ್ದಕ್ಕೆ ಕುಮಾರಸ್ವಾಮಿಯವರು ಐದು ಟೌನ್ ಶಿಪ್ ಯೋಜನೆಗಳನ್ನು ಕೈಬಿಟ್ಟರು. ಈಗಲೂ ಕೂಡ ಬಿಡದಿ ಟೌನ್ ಶಿಪ್ ಯೋಜನೆಗೆ ಜನರ ಆಕ್ರೋಶ, ವಿರೋಧ ಇದೆ. ಹೀಗಾಗಿ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದು ದೇವೇಗೌಡರು ಹೇಳಿದರು.

ಈಗ ಬೆಂಗಳೂರು ಜವಾಬ್ದಾರಿ ಹಾಗೂ ನೀರಾವರಿ ಜವಾಬ್ದಾರಿಯನ್ನು ಒಬ್ಬರೇ ವಹಿಸಿಕೊಂಡಿದ್ದಾರೆ. ಅದರ ಜೊತೆಗೆ ರಾಷ್ಟ್ರೀಯ ಪಕ್ಷದ ಜವಾಬ್ದಾರಿಯನ್ನು ಕೂಡ ಅವರೇ ಹೊತ್ತುಕೊಂಡಿದ್ದಾರೆ. ಏನೋ ಮುಖ್ಯಮಂತ್ರಿ ಆಗಬೇಕೆಂದು ಒಡಂಬಡಿಕೆ ಆಗಿದೆಯಂತೆ. ನಿಮ್ಮಗಳ ಮುಂದೆ ಮನೋರಂಜನೆ ಮಾಡುತ್ತಿದ್ದಾರೆ. ಬಿಡದಿಯ ರೈತರು ಕಣ್ಣೀರಿನಲ್ಲಿ ಕೈ ತೊಡೆಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಕಿಡಿಕಾರಿದರು.

 

Tags:
error: Content is protected !!