ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ತನಿಖೆಯನ್ನು ಅಂತಿಮಗೊಳಿಸಿ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ವರದಿ ಸಲ್ಲಿಕೆ ಮಾಡಿದ್ದಾರೆ.
ಇಲ್ಲಿನ ಲೋಕಾಯುಕ್ತ ಕಚೇರಿಗೆ ಇಂದು(ಫೆಬ್ರವರಿ.12) ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರು ಮುಡಾ ಪ್ರಕರಣದ ವಿಚಾರವಾಗಿ ತನಿಖೆ ನಡೆಸಿರುವುದನ್ನು ಮುಚ್ಚಿದ ಲಕೋಟೆಯಲ್ಲಿ ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯನ್ನು ಮತ್ತೊಮ್ಮೆ ಹಿರಿಯ ಅಧಿಕಾರಿಗಳ ಜೊತೆ ಪರಿಶೀಲಿಸಿದ ಬಳಿಕ ವಿಶೇಷ ಜನಪ್ರತಿನೀಧಿಗಳ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮುಡಾ ಪ್ರಕರಣದ ಅಂತಿಮ ವರದಿಯಲ್ಲಿ ತನಿಖಾಧಿಕಾರಿಗಳು ಏನು ನೀಡಿದ್ದಾರೆಂಬುದು ಗೌಪ್ಯವಾಗಿಯೇ ಉಳಿದಿದೆ. ಮೈಸೂರು ಲೋಕಾಯುಕ್ತ ಅಧಿಕಾರಿಗಳು ವರದಿಯ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಈ ಹಗರಣ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್ ಜ.27ರ ಗಡುವು ನೀಡಿತ್ತು. ಆದರೆ ಇತ್ತೀಚಿಗೆ ಧಾರವಾಡ ಹೈಕೋರ್ಟ್ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವೂ ತಡೆಯಾಜ್ಞೆಯನ್ನು ತೆರವುಗೊಳಿಸಿ ಅಂತಿಮ ವರದಿ ಸಲ್ಲಿಕೆಗೆ ಸೂಚನೆ ನೀಡಿದ್ದರು.
ಇನ್ನೂ ಮೂಲಗಳ ಪ್ರಕಾರ ಈ ವರದಿಯನ್ನು ಲೋಕಾಯುಕ್ತ ಪೊಲೀಸರ ನೇತೃತ್ವದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಎಡಿಜಿಪಿ ಮನೀಶ್ ಖಾರ್ಬಿಕರ್ ಮತ್ತು ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರು ಶುಕ್ರವಾರ(ಫೆಬ್ರವರಿ.14) ಪರಿಶೀಲನೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.



