Mysore
28
scattered clouds

Social Media

ಮಂಗಳವಾರ, 26 ಮೇ 2026
Light
Dark

ಮೈಸೂರು ಮುಡಾ ಕೋಲಾಹಲ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು:  ಮೈಸೂರು ಮುಡಾ ಪ್ರಕರಣ ಸಂಬಂಧ ಕೋಲಾಹಲ ಎದ್ದಿದ್ದು, ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೋರಾಟ ತೀವ್ರಗೊಳಿಸಿದ್ದಾರೆ.

ವಿಧಾನಸಭೆಯಲ್ಲಿ ನಿನ್ನೆ ಚರ್ಚೆಗೆ ಅವಕಾಶ ನೀಡದ್ದಕ್ಕೆ ಸಿಟ್ಟಾದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಮುಡಾ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಯೋಜನೆ ರೂಪಿಸಿರುವ ಮೈತ್ರಿ ನಾಯಕರು ಮೈಸೂರಿಗೆ ಪಾದಯಾತ್ರೆ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಸದನದ ಒಳಗೆ ಹಾಗೂ ಹೊರಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಮೈತ್ರಿ ನಾಯಕರು, ರಾತ್ರಿಯಿಡೀ ವಿಧಾನಸಭೆಯಲ್ಲೇ ಮಲಗಿ ಧರಣಿ ಪ್ರತಿಭಟನೆ ನಡೆಸಿದ್ದಾರೆ.

ಕಳೆದ ತಡರಾತ್ರಿ ಸ್ವಂತ ಖರ್ಚಿನಲ್ಲೇ ಊಟ ತರಿಸಿಕೊಂಡ ಮೈತ್ರಿ ನಾಯಕರು ಸದನದ ಬಾವಿಯೊಳಗೆ ರಾಜ್ಯ ಸರ್ಕಾರದ ಹಗರಣ ಕುರಿತು ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಮುಡಾ ಹಗರಣ ಸಂಬಂಧ ತಪ್ಪಿತಸ್ಥರಿಗೆ ಶಿಕ್ಷೆ ಆಗುವವರೆಗೂ ನಾವು ಧರಣಿ ನಿಲ್ಲಿಸುವುದಿಲ್ಲ. ಮುಡಾ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರು ಸಂಪೂರ್ಣ ಚರ್ಚೆ ಮಾಡಬೇಕು. ಅಲ್ಲಿಯ ತನಕ ಪ್ರತಿಭಟನೆ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

Tags:
error: Content is protected !!