ರಾಜ್ಯ

ಮೈ-ಬೆಂ ಹೆದ್ದಾರಿ | ತಾಲೂಕುಗಳ ಆಗಮನ, ನಿರ್ಗಮನದ ದಾರಿ ಮುಚ್ಚಿಲ್ಲ

  • ಸಚಿವ ಸತೀಶ್‌ ಜಾರಕಿಹೊಳಿ ಮಾಹಿತಿ
  • ಪರಿಷತ್‌ನಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದ ಶಾಸಕ ದಿನೇಶ್‌ ಗೂಳಿಗೌಡ

ಬೆಂಗಳೂರು : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು, ಅಪಘಾತಗಳ ಹಿನ್ನೆಲೆಯಲ್ಲಿ ತೂಬಿನಕೆರೆ ಬಳಿ ಟೋಲ್‌ ಬೈಪಾಸ್‌ ಮಾಡುವ ಸ್ಥಳದಲ್ಲಿ ಟ್ರಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೇಂದ್ರಗಳಲ್ಲಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಿಸಿದ ಆಗಮನ-ನಿರ್ಗಮನ ಪ್ರವೇಶದ್ವಾರಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ಮುಚ್ಚಿರುವುದು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ದಿನೇಶ್‌ ಗೂಳಿಗೌಡ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ಎನ್‌ಎಚ್‌ -275 ರ ಬೆಂಗಳೂರು – ಮೈಸೂರು ವಿಭಾಗದ ತೂಬಿನಕೆರೆ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ಟೋಲ್ ಪ್ಲಾಜಾವನ್ನು ಬೈಪಾಸ್ ಮಾಡುವ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು. ಇಲ್ಲಿ ಪಕ್ಕದ ಹಳ್ಳಿಗರು, ಸ್ಥಳೀಯ ಸಂಚಾರ ಮತ್ತು ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದರಿಂದ ವಾಹನಗಳ ದಟ್ಟಣೆಯಿಂದ ಸರ್ವೀಸ್ ರಸ್ತೆಯಲ್ಲಿ ಅಪಘಾತಗಳಾಗುತ್ತಿದ್ದವು. ಹೀಗಾಗಿ ಇಲ್ಲಿನ ಸೇವಾ ರಸ್ತೆಯಲ್ಲಿ ಸಂಚರಿಸುವ ಭಾರಿ ವಾಹನಗಳನ್ನು ನಿಲ್ಲಿಸುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರಿಂದ ರಸ್ತೆ ಸುರಕ್ಷತಾ ಸಮಸ್ಯೆಗಳ ಹಿತದೃಷ್ಟಿಯನ್ನು ಪರಿಗಣಿಸಿ ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವ ಭಾರಿ ವಾಹನಗಳ (ಟ್ರಕ್‌ ಇತ್ಯಾದಿ) ನಿರ್ಗಮನಕ್ಕೆ ತೂಬಿನಕೆರೆ ಟೋಲ್ ಬೈಪಾಸ್ ಮಾಡುವ ಸ್ಥಳದಲ್ಲಿ ನಿರ್ಬಂಧಿಸಲಾಗಿದೆ. ಆದರೆ, ಇತರೆ ಎಲ್ಲ ವಾಹನಗಳು (ಕಾರುಗಳು, ಜೀಪುಗಳು ಇತ್ಯಾದಿ) ಪಾಂಡವಪುರ ಒಳಗೊಂಡಂತೆ ಪಕ್ಕದ ಹಳ್ಳಿಗಳನ್ನು ತಲುಪಲು ಸೇವಾ ರಸ್ತೆಗೆ ಪ್ರವೇಶಿಸಲು ಮತ್ತು ನಿರ್ಗಮಿಸಲು ಅನುಮತಿ ನೀಡಲಾಗಿರುತ್ತದೆ. ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ವರದಿ ನೀಡಿರುತ್ತಾರೆ ಎಂಬುದಾಗಿ ಸಚಿವರು ಹೇಳಿದ್ದಾರೆ.

ಇನ್ನು ಎಕ್ಸ್‌ಪ್ರೆಸ್‌ವೇದಲ್ಲಿನ ಎರಡೂ ಬದಿಯ ಕಾಮಗಾರಿಗೆ ಸಂಬಂಧಿಸಿದಂತೆ ಯೋಜನಾ ಒಪ್ಪಂದದ ಪ್ರಕಾರ ಬೆಂಗಳೂರಿನಿಂದ ಮೈಸೂರು ಎನ್‌ಎಚ್‌-275 ರವರೆಗೆ ಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರಿಂದ ಮೈಸೂರು ಮಾರ್ಗದಲ್ಲಿ ಆಗಮನ-ನಿರ್ಗಮನ
ಬೆಂಗಳೂರಿನಿಂದ ಮೈಸೂರಿಗೆ ಹೋಗಬೇಕಾದಲ್ಲಿ ವಂಡರ್‌ಲಾ, ಬಿಡದಿ ಬಳಿ ನಿರ್ಗಮನಕ್ಕೆ ದಾರಿ ಇದ್ದರೆ, ಬಿಡದಿಯಲ್ಲಿ ಆಗಮನಕ್ಕೂ ಅವಕಾಶವಿದೆ. ರಾಮನಗರದಲ್ಲಿ ಒಂದು ಕಡೆ, ಚನ್ನಪಟ್ಟಣ, ಮದ್ದೂರು, ಮಂಡ್ಯದಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ತೂಬಿನಕೆರೆ ಇಂಡಸ್ಟ್ರಿಯಲ್‌ ಪ್ರದೇಶದಲ್ಲಿ ಆಗಮನಕ್ಕೆ ಅವಕಾಶವಿದ್ದರೆ, ಭಾರೀ ವಾಹನಗಳಿಗೆ ನಿರ್ಗಮಕ್ಕೆ ಅನುಮತಿಯನ್ನು ನೀಡಲಾಗಿಲ್ಲ. ಶ್ರೀರಂಗಪಟ್ಟಣದ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.

ಮೈಸೂರಿಂದ ಬೆಂಗಳೂರಿಗೆ ಆಗಮನ-ನಿರ್ಗಮನ
ಶ್ರೀರಂಗಪಟ್ಟಣ, ತೂಬಿನಕೆರೆ ಇಂಡಸ್ಟ್ರಿಯಲ್‌ ಏರಿಯಾ, ಮಂಡ್ಯ, ಮದ್ದೂರು, ಚನ್ನಪಟ್ಟಣ, ಬಿಡದಿಗಳಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವಿದ್ದರೆ, ರಾಮನಗರದಲ್ಲಿ ಒಂದು ಕಡೆ ಅವಕಾಶವನ್ನು ಕಲ್ಪಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

7 mins ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

12 mins ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

16 mins ago

ಮಿರ್ಲೆ-ಭೇರ್ಯ-ಕೊಡಿಯಾಲ ರಸ್ತೆ ಅಭಿವೃದ್ಧಿ ಯಾವಾಗ?

ಭೇರ್ಯ ಮಹೇಶ್ ಪ್ರತಿನಿತ್ಯ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಕೆ.ಆರ್.ನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ…

21 mins ago