ರಾಜ್ಯ

ಮೈ-ಬೆಂ ಹೆದ್ದಾರಿ | ತಾಲೂಕುಗಳ ಆಗಮನ, ನಿರ್ಗಮನದ ದಾರಿ ಮುಚ್ಚಿಲ್ಲ

  • ಸಚಿವ ಸತೀಶ್‌ ಜಾರಕಿಹೊಳಿ ಮಾಹಿತಿ
  • ಪರಿಷತ್‌ನಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದ ಶಾಸಕ ದಿನೇಶ್‌ ಗೂಳಿಗೌಡ

ಬೆಂಗಳೂರು : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು, ಅಪಘಾತಗಳ ಹಿನ್ನೆಲೆಯಲ್ಲಿ ತೂಬಿನಕೆರೆ ಬಳಿ ಟೋಲ್‌ ಬೈಪಾಸ್‌ ಮಾಡುವ ಸ್ಥಳದಲ್ಲಿ ಟ್ರಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೇಂದ್ರಗಳಲ್ಲಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಿಸಿದ ಆಗಮನ-ನಿರ್ಗಮನ ಪ್ರವೇಶದ್ವಾರಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ಮುಚ್ಚಿರುವುದು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ದಿನೇಶ್‌ ಗೂಳಿಗೌಡ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ಎನ್‌ಎಚ್‌ -275 ರ ಬೆಂಗಳೂರು – ಮೈಸೂರು ವಿಭಾಗದ ತೂಬಿನಕೆರೆ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ಟೋಲ್ ಪ್ಲಾಜಾವನ್ನು ಬೈಪಾಸ್ ಮಾಡುವ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು. ಇಲ್ಲಿ ಪಕ್ಕದ ಹಳ್ಳಿಗರು, ಸ್ಥಳೀಯ ಸಂಚಾರ ಮತ್ತು ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದರಿಂದ ವಾಹನಗಳ ದಟ್ಟಣೆಯಿಂದ ಸರ್ವೀಸ್ ರಸ್ತೆಯಲ್ಲಿ ಅಪಘಾತಗಳಾಗುತ್ತಿದ್ದವು. ಹೀಗಾಗಿ ಇಲ್ಲಿನ ಸೇವಾ ರಸ್ತೆಯಲ್ಲಿ ಸಂಚರಿಸುವ ಭಾರಿ ವಾಹನಗಳನ್ನು ನಿಲ್ಲಿಸುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರಿಂದ ರಸ್ತೆ ಸುರಕ್ಷತಾ ಸಮಸ್ಯೆಗಳ ಹಿತದೃಷ್ಟಿಯನ್ನು ಪರಿಗಣಿಸಿ ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವ ಭಾರಿ ವಾಹನಗಳ (ಟ್ರಕ್‌ ಇತ್ಯಾದಿ) ನಿರ್ಗಮನಕ್ಕೆ ತೂಬಿನಕೆರೆ ಟೋಲ್ ಬೈಪಾಸ್ ಮಾಡುವ ಸ್ಥಳದಲ್ಲಿ ನಿರ್ಬಂಧಿಸಲಾಗಿದೆ. ಆದರೆ, ಇತರೆ ಎಲ್ಲ ವಾಹನಗಳು (ಕಾರುಗಳು, ಜೀಪುಗಳು ಇತ್ಯಾದಿ) ಪಾಂಡವಪುರ ಒಳಗೊಂಡಂತೆ ಪಕ್ಕದ ಹಳ್ಳಿಗಳನ್ನು ತಲುಪಲು ಸೇವಾ ರಸ್ತೆಗೆ ಪ್ರವೇಶಿಸಲು ಮತ್ತು ನಿರ್ಗಮಿಸಲು ಅನುಮತಿ ನೀಡಲಾಗಿರುತ್ತದೆ. ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ವರದಿ ನೀಡಿರುತ್ತಾರೆ ಎಂಬುದಾಗಿ ಸಚಿವರು ಹೇಳಿದ್ದಾರೆ.

ಇನ್ನು ಎಕ್ಸ್‌ಪ್ರೆಸ್‌ವೇದಲ್ಲಿನ ಎರಡೂ ಬದಿಯ ಕಾಮಗಾರಿಗೆ ಸಂಬಂಧಿಸಿದಂತೆ ಯೋಜನಾ ಒಪ್ಪಂದದ ಪ್ರಕಾರ ಬೆಂಗಳೂರಿನಿಂದ ಮೈಸೂರು ಎನ್‌ಎಚ್‌-275 ರವರೆಗೆ ಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರಿಂದ ಮೈಸೂರು ಮಾರ್ಗದಲ್ಲಿ ಆಗಮನ-ನಿರ್ಗಮನ
ಬೆಂಗಳೂರಿನಿಂದ ಮೈಸೂರಿಗೆ ಹೋಗಬೇಕಾದಲ್ಲಿ ವಂಡರ್‌ಲಾ, ಬಿಡದಿ ಬಳಿ ನಿರ್ಗಮನಕ್ಕೆ ದಾರಿ ಇದ್ದರೆ, ಬಿಡದಿಯಲ್ಲಿ ಆಗಮನಕ್ಕೂ ಅವಕಾಶವಿದೆ. ರಾಮನಗರದಲ್ಲಿ ಒಂದು ಕಡೆ, ಚನ್ನಪಟ್ಟಣ, ಮದ್ದೂರು, ಮಂಡ್ಯದಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ತೂಬಿನಕೆರೆ ಇಂಡಸ್ಟ್ರಿಯಲ್‌ ಪ್ರದೇಶದಲ್ಲಿ ಆಗಮನಕ್ಕೆ ಅವಕಾಶವಿದ್ದರೆ, ಭಾರೀ ವಾಹನಗಳಿಗೆ ನಿರ್ಗಮಕ್ಕೆ ಅನುಮತಿಯನ್ನು ನೀಡಲಾಗಿಲ್ಲ. ಶ್ರೀರಂಗಪಟ್ಟಣದ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.

ಮೈಸೂರಿಂದ ಬೆಂಗಳೂರಿಗೆ ಆಗಮನ-ನಿರ್ಗಮನ
ಶ್ರೀರಂಗಪಟ್ಟಣ, ತೂಬಿನಕೆರೆ ಇಂಡಸ್ಟ್ರಿಯಲ್‌ ಏರಿಯಾ, ಮಂಡ್ಯ, ಮದ್ದೂರು, ಚನ್ನಪಟ್ಟಣ, ಬಿಡದಿಗಳಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವಿದ್ದರೆ, ರಾಮನಗರದಲ್ಲಿ ಒಂದು ಕಡೆ ಅವಕಾಶವನ್ನು ಕಲ್ಪಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago