ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಕೇರಳ ತಿರುವನಂತಪುರದ 93ನೇ ಶಿವಗಿರಿ ತೀರ್ಥಯಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.
ನಾರಾಯಣ ಗುರುಗಳು ಕೇವಲ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು ನೈತಿಕತೆಯ ಚಳವಳಿಯಾಗಿದ್ದರು. ಹೀಗಾಗಿ ಶಿವಗಿರಿ ತೀರ್ಥಯಾತ್ರೆ ಕೂಡ ಚಳವಳಿಯ ಸ್ವರೂಪ ಪಡೆದು ಜಾತಿ ದೌರ್ಜನ್ಯವನ್ನು ಅಳಿಸಿ ಸಮಾಜವನ್ನು ಸಾಮಾಜಿಕ ನ್ಯಾಯದ ಕಡೆ ಮುನ್ನಡೆಸಬೇಕು. ಇದೇ ನಾರಾಯಣ ಗುರುTಗಳು ಕಂಡ ಭಾರತ. ಇದೇ ಶಿವಗಿರಿ ಪ್ರತಿಪಾದಿಸುವ ಭಾರತ. ಇಂಥಾ ಭಾರತವನ್ನು ನಾವು ಒಟ್ಟಾಗಿ ಗಟ್ಟಿಗೊಳಿಸಬೇಕಿದೆ ಎಂದರು.
ಶಿವಗಿರಿ ಮಠವು ಕೇವಲ ಒಂದು ಯಾತ್ರಾ ಕೇಂದ್ರವಾಗಿರದೇ,ಭಾರತದ ಆತ್ಮಸಾಕ್ಷಿಯ ನೈತಿಕ ವಿಶ್ವವಿದ್ಯಾಲಯವಾಗಿದೆ. ಈ ಪವಿತ್ರ ಕ್ಷೇತ್ರದಲ್ಲಿ ನಿಮ್ಮ ಮುಂದೆ ನಿಂತಿರುವುದು ನನ್ನ ಸೌಭಾಗ್ಯ. ಇದು ಬೌದ್ಧಿಕ ಮತ್ತು ವಿಶ್ವದ ಮಾನವಕುಲದ ಚಳವಳಿಯಾಗಿದೆ. ಇದು ಭೌಗೋಳಿಕವಲ್ಲ, ನೈತಿಕತೆಯ ಪ್ರವಾಸ ಎಂದು ಮೆಚ್ಚುಗೆ ಸೂಚಿಸಿದರು.
ರಾಜಕಾರಣ ನೈತಿಕತೆಯಿಂದ ದೂರವಾಗುತ್ತಾ, ಧರ್ಮವು ನೈತಿಕತೆಗಿಂತ ಹೆಚ್ಚಾಗಿ ಅಧಿಕಾರಕ್ಕಾಗಿ ಆಯುಧವಾಗುತ್ತಿರುವ ಅಪಾಯದ ದಿನಗಳಲ್ಲಿ ಶಿವಗಿರಿ ಒಂದು ನೈತಿಕ ಚಳವಳಿಯಾಗಿ ನಮಗೆ ಆದರ್ಶವಾಗಬೇಕು.ಶಿವಗಿರಿ ಮಠ ‘ಜೀವಂತ ಸಂವಿಧಾನ’ದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಶಿವಗಿರಿ ತೀರ್ಥಯಾತ್ರೆಯು ಭಾರತದ ಮೂಲ ‘ಕೋಮು-ವಿರೋಧಿ’ ಯೋಜನೆಯಾಗಿದೆ. ಸಮಾಜವು ಕೃತಕವಾಗಿ ಸೃಷ್ಟಿಸಲ್ಪಟ್ಟ ದ್ವೇಷದಿಂದ ಧ್ರುವೀಕರಣಗೊಳ್ಳುತ್ತಿರುವಾಗ, ಶಿವಗಿರಿಯು ಪ್ರಾಬಲ್ಯಕ್ಕಿಂತ ‘ಸಂವಾದ’ವನ್ನು, ಶ್ರೇಣೀಕೃತ ವ್ಯವಸ್ಥೆಗಿಂತ ‘ಸಮಾನತೆ’ಯನ್ನು ಮತ್ತು ಸಾಂಕೇತಿಕತೆಗಿಂತ ‘ನೈತಿಕತೆ’ಯನ್ನು ಎತ್ತಿ ಹಿಡಿಯುತ್ತದೆ. “ಆಧುನಿಕ ರಾಷ್ಟ್ರ ನಿರ್ಮಾಣದಲ್ಲಿ ಶಿವಗಿರಿ ತೀರ್ಥಯಾತ್ರೆಯ ಪಾತ್ರ” ಎನ್ನುವುದು ಕೇವಲ ಸಾಂಕೇತಿಕವಲ್ಲ. ಇದು ಇಂದಿನ ತುರ್ತು ಅಗತ್ಯ ಮತ್ತು ನಮ್ಮ ಕಾಲದ ಬಿಕ್ಕಟ್ಟುಗಳಿಗೆ ನೇರ ಉತ್ತರ. ಇದರ ಹಿಂದಿರುವ ಶಕ್ತಿ ಶ್ರೀ ನಾರಾಯಣ ಗುರುಗಳು ಕೇವಲ ಒಬ್ಬ ಸಂತನಲ್ಲ, ಬದಲಾಗಿ ಭಾರತದ ಶ್ರೇಷ್ಠ ಸಾಮಾಜಿಕ ದಾರ್ಶನಿಕರಲ್ಲಿ ಒಬ್ಬರು. ನಾರಾಯಣ ಗುರುಗಳು ಅನ್ಯಾಯದ ಚೌಕಟ್ಟಿನೊಳಗೆ ಸುಧಾರಣೆಯನ್ನು ಬಯಸಲಿಲ್ಲ. ಅವರು ಅನ್ಯಾಯದ ಬೇರುಗಳನ್ನೇ ಕಿತ್ತೆಸೆದರು.
ಕೇರಳವು ಜಾತಿ ತಾರತಮ್ಯ, ಮೌಢ್ಯಾಚರಣೆ ಮತ್ತು ಅಸಮಾನತೆಯಿಂದ ಉಸಿರುಗಟ್ಟುತ್ತಿದ್ದಾಗ, “ಮಾನವಕುಲಕ್ಕೆ ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು” ಎಂಬ ಸತ್ಯವನ್ನು ಘೋಷಿಸಿದರು.
ಇದು ಕೇವಲ ಕಾವ್ಯಾತ್ಮಕ ಹೇಳಿಕೆಯಲ್ಲ. ಇದು ಜಾತಿ ತಾರತಮ್ಯ ಸೋಂಕಿನ ಮನುಸ್ಮೃತಿ ಆಧಾರಿತ ಶ್ರೇಣೀಕೃತ ವ್ಯವಸ್ಥೆ, ಧಾರ್ಮಿಕ ಏಕಸ್ವಾಮ್ಯತೆ ಮತ್ತು ಸಾಮಾಜಿಕ ಬಹಿಷ್ಕಾರಕ್ಕೆ ನೀಡಿದ ನೇರ ಸವಾಲಾಗಿತ್ತು ಎಂದರು.
ನಾರಾಯಣ ಗುರುಗಳ ತತ್ವಜ್ಞಾನವು ಕನ್ನಡದ ರಾಷ್ಟ್ರಕವಿ ಕುವೆಂಪು ಅವರು ನಂತರ ಪ್ರತಿಪಾದಿಸಿದ ‘ವಿಶ್ವಮಾನವ’ ಪರಿಕಲ್ಪನೆಯನ್ನು ಒಳಗೊಂಡಿತ್ತು. ಇದು ಜಾತಿರಹಿತ, ಭಯರಹಿತ ಮತ್ತು ಮಾನವೀಯ ಸಮಾಜ ನಿರ್ಮಾಣದ ದೂರದೃಷ್ಟಿಯಾಗಿತ್ತು. ಹಿಂದುಳಿದ ಸಮುದಾಯಗಳು ತಮ್ಮದೇ ಆದ ದೇವಾಲಯಗಳನ್ನು ಸ್ಥಾಪಿಸಬೇಕೆಂದು ಕರೆ ನೀಡಿ, ದೇವಾಲಯಗಳಲ್ಲಿ ವಿಗ್ರಹದ ಬದಲು ಕನ್ನಡಿಯನ್ನು ಪ್ರತಿಷ್ಠಾಪಿಸಿದರು. ದೈವತ್ವವು ಪ್ರತಿ ಮನುಷ್ಯನೊಳಗೆ ನೆಲೆಸಿದ್ದು, ಆತ್ಮಸಾಕ್ಷಾತ್ಕಾರ, ಸಮಾನತೆ ಹಾಗೂ ಯಾರಿಗೂ ಕೇಡು ಬಯಸದಿರುವುದೇ ನಿಜವಾದ ಆರಾಧನೆ ಎಂದು ತಿಳಿಸುವುದು ಇದರ ಉದ್ದೇಶವಾಗಿತ್ತು. ಶಾಲೆಗಳು, ದೇವಾಲಯಗಳು ಮತ್ತು ಸಾಮಾಜಿಕ ಸಂಘಟನೆಗಳನ್ನು ಸ್ಥಾಪಿಸುವ ಮೂಲಕ, ನಾರಾಯಣ ಗುರುಗಳು ಶೋಷಿತರಿಗೆ ಸ್ವಾಭಿಮಾನ, ಜ್ಞಾನ ಮತ್ತು ನಾಯಕತ್ವದ ಗುಣವನ್ನು ಮರುಸ್ಥಾಪಿಸುವ ವೇದಿಕೆಯನ್ನು ಸೃಷ್ಟಿಸಿದರು.
ನಾರಾಯಣ ಗುರುಗಳನ್ನು ಭೇಟಿಯಾದ ನಂತರವೇ ಗಾಂಧೀಜಿಯವರು ಅಸ್ಪೃಶ್ಯತೆ, ಸರಳತೆ ಮತ್ತು ಅಂತರ್ಜಾತಿ ವಿವಾಹಗಳ ಬಗ್ಗೆ ತಮ್ಮ ನಿಲುವನ್ನು ಗಟ್ಟಿಗೊಳಿಸಿದರು. ಅಂತರ್ಜಾತಿ ವಿವಾಹವಲ್ಲದ ಮದುವೆಗಳಿಗೆ ತಾವು ಹಾಜರಾಗುವುದಿಲ್ಲ ಎಂದು ಗಾಂಧೀಜಿಯವರು ನಿರ್ಧರಿಸಿದ್ದು ಕಾಕತಾಳೀಯವಲ್ಲ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…