ರಾಜ್ಯ

ಜಲ ಮಾಲಿನ್ಯ ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಸಿಎಂಗೆ ನರೇಂದ್ರಸ್ವಾಮಿ ಮನವಿ

ಬೆಂಗಳೂರು : ಬಹುತೇಕ ಜಿಲ್ಲೆಗಳಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕ (STP)ಗಳು ಸರಿಯಾಗಿ ಕೆಲಸ ಮಾಡದೆ ಕೊಳಚೆ ನೀರು ನದಿ ಸೇರುತ್ತಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿಎಂ ನರೇಂದ್ರಸ್ವಾಮಿ ಮನವಿ ಮಾಡಿದರು.

ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಸಮಾರೋಪ‌ ಸಮಾರಂಭದಲ್ಲಿ ಪ್ರಸ್ತಾವಿಕ ಭಾಷಣ ಮಾಡಿದ ನರೇಂದ್ರಸ್ವಾಮಿ ಅವರು, ಜಲ ಮಾಲಿನ್ಯ ತಡೆಯಲು ಮಂಡಳಿಯು ರಾಜ್ಯದಲ್ಲಿರುವ ನದಿ ನೀರು ಮಾಪನ ಕೇಂದ್ರಗಳನ್ನು ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತ್ಯಾಜ್ಯದಿಂದ ರಸ್ತೆ ನಿರ್ಮಾಣ ಮಾಡುವ ಆವಿಷ್ಕಾರವನ್ನು ಮಾಡಲಾಗಿದೆ. ಇದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ತ್ಯಾಜ್ಯವನ್ನು ಸಮರ್ಪಕವಾಗಿ ಮರುಬಳಕೆ ಆಗುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ದಾವಣಗೆರೆ ಜಿಲ್ಲೆಯಲ್ಲಿ ಗೃಹ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ, ಸಂಸ್ಕರಿಸಲಾಗುತ್ತಿದೆ. ಇದು ರಾಜ್ಯಕ್ಕೆ ಮಾದರಿಯಾಗಬೇಕು. ಎಲ್ಲಾ ಜಿಲ್ಲೆಗಳೂ ಇದೇ ರೀತಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ನರೇಂದ್ರಸ್ವಾಮಿ ಅವರು ಸಿಎಂಗೆ ಕೇಳಿಕೊಂಡರು. ಅಲ್ಲದೆ ತ್ಯಾಜ್ಯ ಕಡಿಮೆ ಮಾಡಿ, ಪುನರ್‌ ಬಳಕೆ ಹೆಚ್ಚಿಸುವುದಕ್ಕೆ ಪೂರಕವಾಗಿ ವರ್ತುಲ ಅರ್ಥವ್ಯವಸ್ಥೆ ಮತ್ತು ಸುಸ್ಥಿರತೆ ಎಂಬ ವಿಚಾರ ಸಂಕಿರಣದಲ್ಲಿ ತಜ್ಞರು ನೀಡಿದ ಸಲಹೆಯನ್ನು ಆಧರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹಳ್ಖಿ ಹಳ್ಳಿಗೆ ಕೊಂಡೊಯ್ಯುವುದು ಮತ್ತು ಮಂಡಳಿ ಸ್ಥಾಪನೆಯಾಗಲು ಕಾರಣಕರ್ತರಾದ ಶ್ರೀಮತಿ ಇಂದಿರಾ ಗಾಂಧಿ ಅವರನ್ನು ಸ್ಮರಿಸುವುದು ಸುವರ್ಣ ಮಹೋತ್ಸವದ ಉದ್ದೇಶವಾಗಿದೆ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಮಾತ್ರವೇ ಸುವರ್ಣ ಮಹೋತ್ಸವ ಮಾಡದೆ ರಾಜ್ಯದ 25 ಜಿಲ್ಲೆಗಳನ್ನು ಒಳಗೊಂಡು 14 ಕಡೆ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಇಂದಿರಾ ಗಾಂಧಿ ಅವರ ಜನ್ಮದಿನವಾದ ಇಂದು (ನ. 19) ಬೆಂಗಳೂರಿನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:-ಹೋರಾಟಕ್ಕೆ ಸಂವಿಧಾನವೇ ಆಧಾರ : ಸಂಗೀತ ನಿರ್ದೇಶಕ ಹಂಸಲೇಖ

1972ರಲ್ಲಿ ವಿಶ್ವಸಂಸ್ಥೆಯ ಸ್ಟಾಕ್‌ಹೋಮ್ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಇಂದಿರಾ ಗಾಂಧಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯಿದೆಗಳನ್ನು ಜಾರಿಗೆ ತಂದರು. 1972ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು. ಅದೇ ವರ್ಷ ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿಗಳ ಪ್ರಭೇದಗಳನ್ನು ರಕ್ಷಿಸಲು ವನ್ಯಜೀವಿ ಸಂರಕ್ಷಣಾ ಕಾಯ್ದೆ – 1972 ಅನ್ನು ಜಾರಿಗೆ ತಂದರು. 1973ರಲ್ಲಿ ಅಳಿವಿನಂಚಿನಲ್ಲಿರುವ ಹುಲಿಗಳನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಲು ಪ್ರಾಜೆಕ್ಟ್ ಟೈಗರ್ ಎಂಬ ವನ್ಯಜೀವಿ ಸಂರಕ್ಷಣಾ ಯೋಜನೆಯನ್ನು ರೂಪಿಸಿದರು. 1974ರಲ್ಲಿ ಜಲ ಮಾಲಿನ್ಯ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದರು. ಅದೇ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧೀನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. 1981ರಲ್ಲಿ ವಾಯು (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ ಜಾರಿಗೆ ತಂದರು. ಸುವರ್ಣ ಮಹೋತ್ಸವದ ವೇಳೆ ಈ ಕಾಯಿದೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತಿದೆ ಎಂದು ಹೇಳಿದರು.

ಇದಲ್ಲದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 1986ರಲ್ಲಿ ಪರಿಸರ ಸಂರಕ್ಷಣೆ ಕಾಯ್ದೆ ಮತ್ತು 1989ರಲ್ಲಿ ರಾಷ್ಟ್ರೀಯ ಅರಣ್ಯ ನೀತಿ ಜಾರಿಗೆ ತಂದರು. 2005ರಲ್ಲಿ ಯುಪಿಎ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಅವರ ಒತ್ತಾಸೆಯಿಂದಾಗಿ ಅರಣ್ಯ ಹಕ್ಕು ಕಾಯ್ದೆ ಮತ್ತು 2011ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಸ್ಥಾಪನೆ ಮಾಡಲಾಯಿತು. ಅವರನ್ನೂ ಸ್ಮರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಚಲುವರಾಯಸ್ವಾಮಿ, ಬೈರತಿ ಸುರೇಶ್, ಎಂಸಿ.ಸುಧಾಕರ್, ದಿನೇಶ್ ಗುಂಡೂರಾವ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ)ದ ಅಧ್ಯಕ್ಷರು ಹಾಗೂ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಶಾಸಕರುಗಳಾದ ಪೊನ್ನಣ್ಣ, ಶ್ರೀನಿವಾಸ್, ಅಶ್ವತ್ ನಾರಾಯಣ್, ಎ.ಸಿ.ಶ್ರೀನಿವಾಸ್, ಮಂಡಳಿಯ ಸದಸ್ಯ ಕಾರ್ಯದರ್ಶಿಗಳು, ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ 1 ಕೋಟಿ ದತ್ತಿ ನಿದಿ
ಪರಿಸರ ಸಂರಕ್ಷಣೆ ಜೊತೆಗೆ ಗಿಡಮರಗಳನ್ನು ನೆಟ್ಟು ಪರಿಸರ ಕಾಳಜಿಗೈದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ನೀಡುವಂತೆ ನರೇಂದ್ರಸ್ವಾಮಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಮಂಡಳಿ ವತಿಯಿಂದ ತಿಮ್ಮಕ್ಕ ಹೆಸರಿನಲ್ಲಿ ದತ್ತಿ ನಿಧಿ ಸ್ಥಾಪಿಸಲಾಗುವುದು. ಈ ದತ್ತಿ ನಿಧಿಯಿಂದ ಪರಿಸರ ದಿನಾಚರಣೆಯಂದು ಪ್ರಶಸ್ತಿ ನೀಡಲು ಆದೇಶಿಸಬೇಕೆಂದು ಮಖ್ಯಮಂತ್ರಿಗಳನ್ನು ಕೋರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಮ್ಮಕ್ಕ ಹೆಸರಿನಲ್ಲಿ 1 ಕೋಟಿ ರೂ. ದತ್ತಿ ನಿಧಿ ಸ್ಥಾಪಿಸಿ ಆ ಹಣದಿಂದ ಪರಿಸರ ವಾದಿಗಳಿಗೆ ಪ್ರಶಸ್ತಿ ನೀಡಬೇಕು. ಇದರ ಜೊತೆಗೆ ಐವರು ಪರಿಸರವಾದಿಗಳಿಗೂ ದತ್ತಿ ಹಣದಿಂದ ಪ್ರಶಸ್ತಿ ನೀಡುವಂತೆ ಹೇಳಿದರು. ಸಮಾರೋಪ ಸಮಾರಂಭದಲ್ಲಿ ಸಾಲು ಮರದ ತಿಮ್ಮಕ್ಕ ಅವರಿಗೆ ಒಂದು ನಿಮಿಷದ ಮೌನಾಚಾರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ‌

ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ
ಪರಿಸರ ಜಾಗೃತಿ, ಪರಿಸರ ಸಂರಕ್ಷಣೆ ಮೂಲಕ ಮಾಲಿನ್ಯ ಮುಕ್ತ ಕರ್ನಾಟಕದ ನಿರ್ಮಾಣಕ್ಕೆ ಕೈಜೋಡಿಸಿ ಪರಿಸರ ಕಾಳಜಿಯಲ್ಲಿ ಸಾಧನೆಗೈದ ಪರಿಸರವಾದಿಗಳಿಗೆ ಮಂಡಳಿ ವತಿಯಿಂದ “ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ” ಯನ್ನು ವಿತರಣೆ ಮಾಡಲಾಯಿತು. ಕೆರೆ ಸಂರಕ್ಷಣೆ, ಅರಣ್ಯ ವೃದ್ಧಿ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣದಲ್ಲಿ ಸಾಧನೆಗೈದ ವ್ಯಕ್ತಿಗಳು, ಸಂಸ್ಥೆ, ಮತ್ತು ಜಿಲ್ಲಾಡಳಿತಕ್ಕೆ ರಾಜ್ಯ ಮಟ್ಟದ ಐದು ಪ್ರಶಸ್ತಿ ಜೊತೆಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯಿತು. ಇದರ ಜೊತೆಗೆ ವಿಧಾನಸಭಾ ಕ್ಷೇತ್ರವಾರು ಬಹುಮಾನ ವಿತರಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮತ್ತಷ್ಟು ಸ್ಪೂರ್ತಿ ತುಂಬಲಾಯಿತು.

ಪರಿಸರ ಜಾಗೃತಿ ಕುರಿತು ವಿವಿಧ ಸ್ಪರ್ಧೆ
ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹತ್ತು-ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಅವರಿಗೆ ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಅದೇ ರೀತಿ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಾಡುವುದರಲ್ಲಿ ಯುವಕರ ಪಾತ್ರ ಕೂಡ ಮಹತ್ವದ್ದು ಎಂದು ಪರಿಗಣಿಸಿ ‘ಪರಿಸರದ ಬಗ್ಗೆ ರಿಲ್ಸ್ ಮಾಡಿ ಬಹುಮಾನ ಗೆಲ್ಲಿ’ ಎಂಬ ಸ್ಪರ್ಧೆ ಆಯೋಜಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

6 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

6 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

7 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

7 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

7 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

7 hours ago