Mysore
21
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಮೈಸೂರಿಗೆ ಬಂದಿದ್ದ ಮೋದಿ ಆತಿಥ್ಯದ ವೆಚ್ಚ ನೀಡದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ: ಈಶ್ವರ ಖಂಡ್ರೆ

ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ 3.33 ಕೋಟಿ ಬಾಕಿ ಮೊತ್ತವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ಪಾವತಿಸಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು(ಮೇ.25) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಲಿ ಯೋಜನೆ ಕಾರ್ಯಕ್ರಮ ನಡೆದಾಗ, ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದರು.

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದರು.

ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6 ಕೋಟಿ 33 ಲಕ್ಷ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3ಕೋಟಿ 33 ಲಕ್ಷ ರೂ. ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ತಿಳಿಸಿದರು. ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಸಚಿವರು ಹೇಳಿದರು.

Tags:
error: Content is protected !!