ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ಈ ಮಾರ್ಗಸೂಚಿ ಜಾರಿಗೆ ತರಲಾಗಿದ್ದು, ಯಾವುದೇ ಬಹಳಷ್ಟು ಸಂಖ್ಯೆಯಲ್ಲಿ ಜನ ಸೇರುವ ಸಭೆ ಸಮಾರಂಭಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ.
ಹಬ್ಬಗಳು, ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಕ್ರೀಡಾ ಕೂಟಗಳಂತಹ ಬೃಹತ್ ಜನ ಸಮುದಾಯ ಸೇರುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿ ಜಾರಿಗೆ ತರಲಾಗಿದೆ.
ಮಾರ್ಗಸೂಚಿಯಲ್ಲೇನಿದೆ?: ಸಾರ್ವಜನಿಕ ಕಾರ್ಯಕ್ರಮಕ್ಕೂ ಮುನ್ನ ಸ್ಥಳದ ಸಂಪೂರ್ಣ ಪರಿಶೀಲನೆ ಮತ್ತು ಕಾರ್ಯಕ್ರಮ ಆಯೋಜಕರ ಸಹಯೋಗದೊಂದಿಗೆ ವಿವರವಾದ ಯೋಜನೆ ರಚಿಸುವುದು ಈಗ ಕಡ್ಡಾಯ. ಕಾರ್ಯಕ್ರಮ ನಡೆಯುವ ಸ್ಥಳದ ಸಾಮರ್ಥ್ಯ, ತುರ್ತು ನಿರ್ಗಮನ ಮಾರ್ಗಗಳ ಲಭ್ಯತೆ ಮತ್ತು ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳನ್ನು ಪರಿಶೀಲಿಸಲೇಬೇಕು. ಜನಸಂದಣಿ ನಿರ್ವಹಣೆಗೆ ಪೊಲೀಸರ ಹೊಣೆಗಾರಿಕೆಗಳು, ಟ್ರಾಫಿಕ್ ನಿಯಂತ್ರಣ, ವೈದ್ಯಕೀಯ ನೆರವು ಮತ್ತು ಟಿಕೆಟ್ ವ್ಯವಸ್ಥೆಗಳನ್ನು ಮಾಡಲೇಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
೧. ಸಾರ್ವಜನಿಕರ ಪ್ರವೇಶ ದ್ವಾರಗಳಲ್ಲಿ ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಬೇಕು.
೨. ಜನಸಂದಣಿಯನ್ನು ಸುಗಮಗೊಳಿಸಲು ಕ್ಯೂ ಆರ್ ಕೋಡ್ ಅಥವಾ ಬಯೋಮೆಟ್ರಿಕ್ ತಂತ್ರಜ್ಞಾನದ ಬಳಕೆ ಮತ್ತು ವಿಭಿನ್ನ ವರ್ಗಗಳಿಗೆ ಪ್ರತ್ಯೇಕ ಪ್ರವೇಶ ದ್ವಾರಗಳನ್ನು ಒದಗಿಸಬೇಕು.
೩. ತುರ್ತು ನಿರ್ಗಮನ ಮಾರ್ಗಗಳನ್ನು ಸ್ಪಷ್ಟವಾಗಿ ಗುರುತಿಸಬೇಕು ಮತ್ತು ಯಾವುದೇ ಸಂದರ್ಭದಲ್ಲಿಯೂ ಲೌಡ್ಸ್ಪೀಕರ್ಗಳ ಮೂಲಕ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡುವ ವ್ಯವಸ್ಥೆ ಇರಬೇಕು.
೪. ತುರ್ತು ವಾಹನಗಳಾದ ಅಂಬುಲೆನ್ಸ್ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವೈದ್ಯಕೀಯ ನೆರವಿನ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಬೇಕು.
೫. ಪ್ರತಿಭಟನೆ ಅಥವಾ ಹವಾಮಾನ ದುರಂತಗಳಂತಹ ಅನಿರೀಕ್ಷಿತ ಪರಿಸ್ಥಿತಿಗಳಿಗೆ ತಯಾರಿ ನಡೆಸಲು ಸಿಮ್ಯುಲೇಷನ್ ಡ್ರಿಲ್ಗಳನ್ನು ನಡೆಸುವ ಮೂಲಕ ರಕ್ಷಣಾ ತಂಡಗಳ ಜವಾಬ್ದಾರಿಗಳನ್ನು ಮೊದಲೇ ಗುರುತಿಸಬೇಕು.





