Mysore
21
overcast clouds

Social Media

ಬುಧವಾರ, 15 ಜುಲೈ 2026
Light
Dark

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.

ಸುಳ್ಳು ಆದಾಯ ಪ್ರಮಾಣಪತ್ರ ನೀಡಿದ ಆರೋಪದ ಹಿನ್ನಲೆಯಲ್ಲಿ ವಿಧಾನಸೌಧ ಪೊಲೀಸರು ಸುಮಾ ಸಾಹುಕಾರ್ ಅವರಿಗೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಅಧಿಕೃತ ನೋಟೀಸ್ ಜಾರಿ ಮಾಡಿದ್ದಾರೆ.

ಈ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಸಹಾಯಕ ಕಾರ್ಯದರ್ಶಿಯವರು ವಿಧಾನಸೌಧ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ನೀಡಿದ್ದರು. ದೂರಿನ ಅನ್ವಯ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಸಾಹುಕಾರ್ ಅವರು ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದರು.
ಹಿಂದುಳಿದ ವರ್ಗಗಳ ಮೀಸಲಾತಿ ಅಥವಾ ಶುಲ್ಕ ವಿನಾಯಿತಿ ಪಡೆಯುವ ದುರುದ್ದೇಶದಿಂದ ಸುಮಾ ಅವರು ತಮ ವಾರ್ಷಿಕ ಆದಾಯ ಕೇವಲ 40,000 ರೂ. ಎಂದು ನಮೂದಾಗಿದ್ದ ನಕಲಿ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂಬ ಆರೋಪವಿದೆ.

ಅಧಿಕಾರ ದುರುಪಯೋಗ: ಅಂದಿನ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ತಂದೆಯವರ ಪ್ರಭಾವವನ್ನು ಬಳಸಿಕೊಂಡು ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಈ ಅಕ್ರಮ ಎಸಗಲಾಗಿದೆ ಎಂದು ದೂರಲಾಗಿದೆ.

ಇಲಾಖೆಯ ದಾಖಲೆಗಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಸುಳ್ಳು ಆದಾಯ ಪ್ರಮಾಣಪತ್ರ ಮತ್ತು 3 ಬಿ ಮೀಸಲಾತಿ ಪ್ರಮಾಣಪತ್ರದಲ್ಲಿ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ರೂ. ಎಂದು ತೋರಿಸಿ ವಂಚಿಸಿರುವುದು ಬೆಳಕಿಗೆ ಬಂದಿದೆ.

Tags:
error: Content is protected !!