Mysore
19
overcast clouds
Light
Dark

ಕರ್ನಾಟಕದಲ್ಲಿ ಮತ್ತೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸರಕಾರ ತರಲು ಶ್ರಮಿಸುತ್ತೇನೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರಾಮನಗರ: ರಾಜ್ಯದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚಿಸಲು ಶ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಎನ್‌ಡಿಎ ಸರ್ಕಾರವನ್ನು ತರಲು ಬಿಜೆಪಿ, ಜೆಡಿಎಸ್‌ನ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್‌ ಪಕ್ಷ ಮತ್ತೊಮ್ಮೆ ಕಾಂಗ್ರೆಸ್‌ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಾರು ಸಿಎಂ ಆಗಬೇಕು ಎಂಬುದು ನನಗೆ ಮುಖ್ಯವಲ್ಲ. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ನನಗೆ ರಾಜ್ಯ ಮತ್ತು ಜನರ ಕಲ್ಯಾಣ ಮತ್ತು ಅಭಿವೃದ್ಧಿ ಮುಖ್ಯ ಎಂದರು.

ರಾಜ್ಯದಲ್ಲಿ ಜನಪರ ಸರ್ಕಾರ ತರುವುದು ನಮಗೆ ಮುಖ್ಯವಾಗಿದೆ.  ಪ್ರತಿ ಕುಟುಂಬದ ಹಿತವನ್ನು ಬಯಸುವ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ತರಲು ಬಯಸುತ್ತೇವೆ. ಅದಕ್ಕಾಗಿ ಉಭಯ ಪಕ್ಷಗಳ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದ್ದು, ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲು ನಾಯಕರು ಈಗಿನಿಂದಲೇ ಶ್ರಮ ವಹಿಸಲಿದ್ದಾರೆ ಎನ್ನಲಾಗಿದೆ.