ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮೀ ಮತ್ತು ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು. ಸಿಎಂ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ 4 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ.
ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮವಾಗುತ್ತದೆ. ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ಹಾಸ್ಯಾಸ್ಪದವಾಗಿದೆ ಎಂದು ಕಿಡಿಕಾರಿದರು.
ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ ಡಿಬಿಟಿ ವರ್ಗಾವಣೆ ಮಾಡಿ ಎಂದು ಆಗ್ರಹಿಸಿದರು.





