ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಭೇಟಿಯಾಗಲು ದೆಹಲಿಗೂ ಹೋಗುತ್ತಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೆಚ್ಚು ಗೊಂದಲವನ್ನೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಯಕತ್ವ ಬದಲಾವಣೆ ಕುರಿತಂತೆ ಹೆಚ್ಚು ವ್ಯಾಖ್ಯಾನ ಮಾಡುವುದರಿಂದ ಯಾವುದೇ ಉತ್ತರ ಸಿಗುವುದಿಲ್ಲ. ಹೈಕಮಾಂಡ್ ಯಾವ ಸಂದರ್ಭದಲ್ಲಿ ಯಾವ ತೀರ್ಮಾನವನ್ನು ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತದೆ. ಈ ಬಗ್ಗೆ ಚರ್ಚೆ ಮಾಡಿದರೆ ಉಪಯೋಗವಿಲ್ಲ ಎಂದು ಹೇಳಿದರು.
ತಮ್ಮ ಅಭಿಮಾನಿಗಳು, ಹಿತೈಷಿಗಳು ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಂದರ್ಭದಲ್ಲಿ ಘೋಷಣೆಗಳನ್ನು ಕೂಗುತ್ತಾರೆ. ಅವರು ಅಪೇಕ್ಷೆ ಪಡುತ್ತಾರೆ. ಅವರ ಭಾವನೆಯನ್ನು ವ್ಯಕ್ತಪಡಿಸುತ್ತಾರೆ. ಅದನ್ನು ತಡೆಯಲಾಗುವುದಿಲ್ಲ. ಈಗಾಗಲೇ ಆ ರೀತಿ ಭಾವನೆ ವ್ಯಕ್ತಪಡಿಸದಂತೆ ಅಭಿಮಾನಿಗಳು, ಹಿತೈಷಿಗಳಿಗೆ ಹೇಳಿದ್ದೇನೆ. ಆದರೂ ಅವರು ಮಾಡುತ್ತಿದ್ದಾರೆ. ನಾಯಕತ್ವದ ಗೊಂದಲಕ್ಕೆ ಕೈ ಜೋಡಿಸುವುದಿಲ್ಲ ಎಂದರು.




