Mysore
27
scattered clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಬಂಡೀಪುರ- ವಯನಾಡು ನಡುವೆ ಸಂಚಾರಕ್ಕೆ ತೊಡಕಿಲ್ಲ: ಈಶ್ವರ ಖಂಡ್ರೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವೆ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಸಂಚಾರ, ಪ್ರಸ್ತುತ ರಾತ್ರಿ 9ರವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್ ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ. ಹೀಗಾಗಿ ರಾತ್ರಿ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಿಲು ವಿದ್ಯುತ್ ಕಂಪನಿಗಳಿಗೆ ತಿಳಿಸಿರುವುದಾಗಿ ಹೇಳಿದರು.

ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್ ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಅರಣ್ಯವಾಸಿಗಳ ಸ್ಥಳಾಂತರ:
ರಾಜ್ಯದ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಮೀಸಲು ಅರಣ್ಯ, ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ವಿವಿಧ ಅರಣ್ಯಗಳಲ್ಲಿ ಹಲವಾರು ವರ್ಷಗಳಿಂದ ಅರಣ್ಯವಾಸಿಗಳು ಜೀವಿಸುತ್ತಿದ್ದು, ಗಂಡ, ಹೆಂಡತಿ ಒಳಗೊಂಡು ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದರು.

Tags: