ಬೆಂಗಳೂರು: ಇದೇ ಡಿಸೆಂಬರ್.27ರಂದು ನಡೆಯುವ ಸಾರ್ವಜನಿಕ ಸಭೆಗೆ ʼಜೈ ಭೀಮ್, ಜೈ ಭಾಪು, ಜೈ ಸಂವಿಧಾನʼ ಎಂದು ಹೆಸರಿಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ ಈ ಪ್ರದೇಶವನ್ನು ʼಮಹಾತ್ಮ ಗಾಂಧೀಜಿ ನವನಗರʼ ಎಂದು ಘೋಷಣೆ ಮಾಡಿದ್ದೇವೆ. ಡಿಸೆಂಬರ್.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಭಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ ಎಂದರು.
1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿಯವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಷಯ ಎಂದು ಹೇಳಿದರು.
ಬೆಳಗಾವಿಯಲ್ಲಿ ಅಂದು ನಡೆದ ಅಧಿವೇಶನದಲ್ಲಿ ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಅಂದಿನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಂದು 80ಕ್ಕೂ ಹೆಚ್ಚು ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ.
ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಈ ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ಮಾಡುತ್ತಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು. ದೇಶಕ್ಕೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಈ ಕಾರ್ಯಕಾರಿ ಸಭೆಯಲ್ಲಿ ಸರ್ಚಿಸುತ್ತೇವೆ ಎಂದು ತಿಳಿಸಿದರು.





