ರಾಜ್ಯ

ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ : ಸ್ಥಳೀಯರಿಗೆ ಆತಂಕ ಬೇಡ ; ಈಶ್ವರ ಖಂಡ್ರೆ ಸ್ಪಷ್ಟನೆ

ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ. ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸುತ್ತದೆ. ಇಷ್ಟೊಂದು ದನಕರುಗಳನ್ನು ಒಟ್ಟಿಗೆ ಕಾಡಿಗೆ ತೆಗೆದುಕೊಂಡು ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ, ನೀರಿನ ಕೊರತೆ ಎದುರಾಗುತ್ತಿದೆ.

ಕಾಲುಬಾಯಿ ರೋಗ, ಚರ್ಮಗಂಟು ಅಥವಾ ಬಾವು (ಲಿಂಪಿ ಸ್ಕಿನ್), ನೆರಡಿ (ಆಂಥರಾಕ್ಸ್) ಮೊದಲಾದ ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇರುತ್ತದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಜಾನುವಾರುಗಳನ್ನು ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ. ಆದರೆ ಸ್ಥಳೀಯರ ದನಕರುಗಳಿಗೆ ಮತ್ತು ಅರಣ್ಯಹಕ್ಕು ಕಾಯಿದೆಯಡಿ ಹಕ್ಕು ಪಡೆದವರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಈಗಾಗಲೇ ಅರಣ್ಯ ಇಲಾಖೆ, ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿಯನ್ನು ಬಳಸಿಕೊಂಡು 10-15 ರೈತರಿಗೆ ಹೆಚ್ಚು ಹಾಲು ನೀಡುವ ಹೈಬ್ರೀಡ್ ಹಸುಗಳನ್ನು ಕೊಡಿಸಿದ್ದಾರೆ. ಪ್ರಸ್ತುತ ಕಾಡಿನಲ್ಲಿ ದನ ಮೇಯಿಸುವ ಕಾಯಕವನ್ನೇ ಜೀವನೋಪಾಯ ಮಾಡಿಕೊಂಡಿರುವವರಿಗೆ ಇಂತಹ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಹಂತ ಹಂತವಾಗಿ ಕಾಡಿನಲ್ಲಿ ದನ, ಕರು, ಎಮ್ಮೆ, ಮೇಕೆ, ಕುರಿಗಳನ್ನು ಮೇಯಿಸದಂತೆ ಮನವೊಲಿಸಲಾಗುವುದು ಎಂದೂ ತಿಳಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನಲ್ಲಿ ಈ ಸಂಬಂಧ ಸುದೀರ್ಘ ವಾದ ಪ್ರತಿವಾದ ನಡೆದು, ಅಂತಿಮವಾಗಿ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಅವಕಾಶ ಇರುವುದಿಲ್ಲ ಎಂಬ ತೀರ್ಪು ಬಂದಿದೆ. ಆ ತೀರ್ಪಿನ ಬಳಿಕ ರಾಜ್ಯಕ್ಕೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಜಾನುವಾರು ತಂದು ರಾಜ್ಯದ ಕಾಡಿನಲ್ಲಿ ಮೇಯಿಸಲಾಗುತ್ತಿದೆ.

ಹೀಗೆ ತಿಂಗಳುಗಟ್ಟಲೆ  ಕಾಡಿನಲ್ಲಿ ದನಕರು ಮೇಯಿಸುವುದರಿಂದ ಕಾಡಿನ ಹುಲ್ಲುಗಾವಲು ಬರಿದಾಗುತ್ತಿದೆ, ಸಸ್ಯಸಂವರ್ಧನೆಗೂ ಅಡ್ಡಿಯಾಗುತ್ತದೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದು ವನ್ಯಜೀವಿಗಳಿಗೆ ವಿಷ ಹಾಕುವ ಹಂತ ತಲುಪಿದ್ದ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಮತ್ತು ನಿಯಮಾನುಸಾರ ಕ್ರಮ ವಹಿಸಲು ಸೂಚಿಸಲಾಗಿತ್ತು ಎಂದೂ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

18 mins ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

24 mins ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

36 mins ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

48 mins ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

1 hour ago

ಗೋಣಿಕೊಪ್ಪ | ಹುಲಿ ದಾಳಿಗೆ ಹಸು ಬಲಿ

ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…

1 hour ago