ರಾಜ್ಯ

ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ : ಸ್ಥಳೀಯರಿಗೆ ಆತಂಕ ಬೇಡ ; ಈಶ್ವರ ಖಂಡ್ರೆ ಸ್ಪಷ್ಟನೆ

ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ. ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸುತ್ತದೆ. ಇಷ್ಟೊಂದು ದನಕರುಗಳನ್ನು ಒಟ್ಟಿಗೆ ಕಾಡಿಗೆ ತೆಗೆದುಕೊಂಡು ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ, ನೀರಿನ ಕೊರತೆ ಎದುರಾಗುತ್ತಿದೆ.

ಕಾಲುಬಾಯಿ ರೋಗ, ಚರ್ಮಗಂಟು ಅಥವಾ ಬಾವು (ಲಿಂಪಿ ಸ್ಕಿನ್), ನೆರಡಿ (ಆಂಥರಾಕ್ಸ್) ಮೊದಲಾದ ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇರುತ್ತದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಜಾನುವಾರುಗಳನ್ನು ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ. ಆದರೆ ಸ್ಥಳೀಯರ ದನಕರುಗಳಿಗೆ ಮತ್ತು ಅರಣ್ಯಹಕ್ಕು ಕಾಯಿದೆಯಡಿ ಹಕ್ಕು ಪಡೆದವರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಈಗಾಗಲೇ ಅರಣ್ಯ ಇಲಾಖೆ, ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿಯನ್ನು ಬಳಸಿಕೊಂಡು 10-15 ರೈತರಿಗೆ ಹೆಚ್ಚು ಹಾಲು ನೀಡುವ ಹೈಬ್ರೀಡ್ ಹಸುಗಳನ್ನು ಕೊಡಿಸಿದ್ದಾರೆ. ಪ್ರಸ್ತುತ ಕಾಡಿನಲ್ಲಿ ದನ ಮೇಯಿಸುವ ಕಾಯಕವನ್ನೇ ಜೀವನೋಪಾಯ ಮಾಡಿಕೊಂಡಿರುವವರಿಗೆ ಇಂತಹ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಹಂತ ಹಂತವಾಗಿ ಕಾಡಿನಲ್ಲಿ ದನ, ಕರು, ಎಮ್ಮೆ, ಮೇಕೆ, ಕುರಿಗಳನ್ನು ಮೇಯಿಸದಂತೆ ಮನವೊಲಿಸಲಾಗುವುದು ಎಂದೂ ತಿಳಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನಲ್ಲಿ ಈ ಸಂಬಂಧ ಸುದೀರ್ಘ ವಾದ ಪ್ರತಿವಾದ ನಡೆದು, ಅಂತಿಮವಾಗಿ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಅವಕಾಶ ಇರುವುದಿಲ್ಲ ಎಂಬ ತೀರ್ಪು ಬಂದಿದೆ. ಆ ತೀರ್ಪಿನ ಬಳಿಕ ರಾಜ್ಯಕ್ಕೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಜಾನುವಾರು ತಂದು ರಾಜ್ಯದ ಕಾಡಿನಲ್ಲಿ ಮೇಯಿಸಲಾಗುತ್ತಿದೆ.

ಹೀಗೆ ತಿಂಗಳುಗಟ್ಟಲೆ  ಕಾಡಿನಲ್ಲಿ ದನಕರು ಮೇಯಿಸುವುದರಿಂದ ಕಾಡಿನ ಹುಲ್ಲುಗಾವಲು ಬರಿದಾಗುತ್ತಿದೆ, ಸಸ್ಯಸಂವರ್ಧನೆಗೂ ಅಡ್ಡಿಯಾಗುತ್ತದೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದು ವನ್ಯಜೀವಿಗಳಿಗೆ ವಿಷ ಹಾಕುವ ಹಂತ ತಲುಪಿದ್ದ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಮತ್ತು ನಿಯಮಾನುಸಾರ ಕ್ರಮ ವಹಿಸಲು ಸೂಚಿಸಲಾಗಿತ್ತು ಎಂದೂ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

37 seconds ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

11 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

17 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago