Mysore
27
overcast clouds

Social Media

ಗುರುವಾರ, 07 ಮೇ 2026
Light
Dark

ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಡಾ. ಶರಣ‌ ಪ್ರಕಾಶ್ ಪಾಟೀಲ್

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ.

ಮಳೆಯಿಂದ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು ಏಳು ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸಚಿವರು ಈ ಮಾಹಿತಿ ನೀಡಿದರು.

ಬೌರಿಂಗ್‌ ಆಸ್ಪತ್ರೆಯ ದುರಂತದ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಪಾಟೀಲ್‌ ತಿಳಿಸಿದರು.

ಬೌರಿಂಗ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆಸ್ಪತ್ರೆ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ತಜ್ಞರ ತಂಡ ಪರಿಶೀಲನೆ ನಡೆಸಲು ಆದೇಶಿಸಲಾಗಿದೆ ಎಂದು ವಿವರಿಸಿದರು.

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು ಮೃತಪಟ್ಟವರಿಗೆ ಮುಖ್ಯಮಂತ್ರಿಗಳು ಈಗಾಗಲೇ ರೂ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ವೈದ್ಯರಿಗೆ ತಿಳಿಸಲಾಗಿದೆ. ಮುಂದೆ ಈ ರೀತಿಯ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

Tags:
error: Content is protected !!