Mysore
25
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

ನಮ್ಮ ಸಂಕಲ್ಪ ಕುಟುಂಬ ರಾಜಕೀಯ ವಿರುದ್ಧ ಇರಬೇಕು: ಪ್ರೀತಂ ಗೌಡ!

ಪಾಂಡವಪುರ: ಮೊದಲು ನಾವು ನೆಂಟಸ್ಥಿಕೆಯನ್ನು ಬಿಡಬೇಕು. ಮೊದಲು ಪಕ್ಷಬೇಕು, ಅದಕ್ಕೂ ಮೊದಲು ದೇಶ ಬೇಕು ಎನ್ನಬೇಕು. ಇದಕ್ಕೆ ನಮ್ಮೆಲ್ಲರ ಮನಸ್ಥಿತಿ ಒಂದೇ ಆಗಿರಬೇಕು. ಚುನಾವಣೆ ಸಮಯದಲ್ಲಿ ಮಂಡ್ಯದಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕು ಎಂದು ಮಾಜಿ ಶಾಸಕ ಪ್ರೀತಂ ಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.

ನಗರದಲ್ಲಿಂದು ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಯಕ್ತಿಕ ನೆಂಟಸ್ಥಿಕೆ ಮೀರಿ ಪಕ್ಷ ಬೇಕು. ಪಕ್ಷಕ್ಕಿಂತ ನಮಗೆ ದೇಶ ಮುಖ್ಯ ಎಂಬುದಾಗಿರಬೇಕು. ಇದಕ್ಕೆ ನಮ್ಮೆಲ್ಲರ ಮನಸ್ಥಿತಿ ಒಂದೇ ಆಗಿರಬೇಕು. ದೇಶ, ರಾಜ್ಯ ಮತ್ತು ಮಂಡ್ಯ ಸೇರಿದಂತೆ ಎಲ್ಲಾ ಕಡೆ ಕುಟುಂಬ ರಾಜಕಾರಣ ನಡೆಯುತ್ತಿದ್ದು, ಕುಟುಂಬ ರಾಜಕಾರಣದ ವಿರುದ್ಧ ನಮ್ಮ ಸಂಕಲ್ಪ ಇರುತ್ತದೆ. ಪ್ರಾದೇಶಿಕ ಪಕ್ಷಗಳಲ್ಲಿ ನಾವು ಕುಟುಂಬ ರಾಜಕಾರಣ ಕಾಣುತ್ತೇವೆ. ನಮ್ಮ ರಾಜ್ಯದ ಬಗ್ಗೆ ಹೇಳುವುದು ಬೇಡ, ಅದು ನಿಮಗೆ ಗೊತ್ತಿದೆ. ಪರೋಕ್ಷವಾಗಿ ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ಮಾಡಿದರು.

ಇನ್ನು ಲೋಕಸಭಾ ಚುನಾವಣೆಗೆ ಟಿಕೆಟ್‌ ಹಂಚಿಕೆಗೆ ಸಂಬಂಧಸಿದಂತೆ, ಹಾಸನ ಮತ್ತು ಮಂಡ್ಯದಲ್ಲಿ ಜೆಡಿಎಸ್‌ ಟಿಕೆಟ್‌ ಕೇಳಿದೆ, ಆದರೆ ಅದು ಅಂತಿಮವಾಗಿಲ್ಲ. ಒಂದು ವೇಳೆ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟು ಕೊಡುವುದಾದರೆ ಅಭ್ಯರ್ಥಿ ಆಯ್ಕೆಯಲ್ಲಿ ಕಾರ್ಯಕರ್ತರ ಒಪ್ಪಿಗೆ ಪಡೆಯಬೇಕು ಎಂದು ಹೇಳಿದರು.

ನಮಗೆ ಲೋಕಸಭೆ ಚುನಾವಣೆ ಗೆಲುವು ಮಾನದಂಡ ಅಷ್ಟೆ. ಸರ್ವೇ ರಿಪೋರ್ಟ್ ಯಾರಿಗೆ ಬರುತ್ತೆ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಮುಂದೆ ಪಕ್ಷ ಬೆಳೆಯಬೇಕು ಅಂದರೇ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಹಾಸನ, ಮಂಡ್ಯ ಸೇರಿ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. ಹೀಗಾಗಿ ನಮ್ಮ ಕಾರ್ಯಕರ್ತರು ಮಂಡ್ಯ ಕ್ಷೇತ್ರವನ್ನು ಕೇಳುತ್ತಿದ್ದಾರೆ. ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅವರ ಅಭಿಪ್ರಾಯ ಸಂಗ್ರಹಿಸಿ ನಾಯಕರಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನವನ್ನು ಬಿಜೆಪಿ ಗೆದ್ದಿರಲಿಲ್ಲ. ಕೆ.ಆರ್‌.ಪೇಟೆಯಲ್ಲಿ ನಾರಾಯಣಗೌಡ ಮೊದಲ ಬಾರಿಗೆ ಗೆದ್ದರು. ಜಿಲ್ಲೆಯ ಪ್ರತಿ ಗ್ರಾಮದಲ್ಲೂ ಬಿಜೆಪಿ ಪಕ್ಷ ಕಟ್ಟೋಣ. ಮೈತ್ರಿಯಾಗಿದೆ ಟಿಕೆಟ್ ಬಿಟ್ಟುಕೊಡಬೇಕು ಎಂದು ಕಾರ್ಯಕರ್ತರು ಕುಂದುವ ಅವಶ್ಯಕತೆ ಇಲ್ಲ. ಬಿಜೆಪಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತದೆ ಎಂಬುವುದರ ಬಗ್ಗೆ ತೀರ್ಮಾನವಾಗಿಲ್ಲ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!