ರಾಜ್ಯ

ಈಶ್ವರ ಖಂಡ್ರೆ ಭೇಟಿ ಮಾಡಿದ ಪವನ್ ಕಲ್ಯಾಣ್; ಆಂಧ್ರಪ್ರದೇಶಕ್ಕೆ ಆನೆ ನೀಡುವ ಬಗ್ಗೆ ಶೀಘ್ರ ನಿರ್ಧಾರ

ಬೆಂಗಳೂರು: ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದು, ರಾಜ್ಯದ ಜನರ ಭಾವನೆಗೆ ಚ್ಯುತಿ ಆಗದಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ನಡೆದ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಆಂಧ್ರ ಮತ್ತು ರಾಜ್ಯದ ಅರಣ್ಯಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಆನೆಗಳನ್ನು ನೀಡುವುದು ಸಾಮಾನ್ಯ ಪ್ರಕ್ರಿಯೆ. ಆದರೆ ದಸರಾ ಆನೆಗಳನ್ನು ಯಾವುದೇ ರಾಜ್ಯಕ್ಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂಧ್ರದಲ್ಲಿಯೂ ಕಾಡಾನೆಗಳ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಆನೆಗಳ ಹಾವಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ರೈಲ್ವೆ ಬ್ಯಾರಿಕೇಡ್ ಅಳವಡಿಕೆಯ ಯಶಸ್ಸು, ಕಾಡಾನೆಗಳ ಸೆರೆ ಕಾರ್ಯಾಚರಣೆ, ಆನೆ ಪಳಗಿಸುವುದು ಮತ್ತು ಮಾವುತರ ತರಬೇತಿ ಕುರಿತಂತೆ ಚರ್ಚಿಸಲು ಇಂದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೊನಿಡಲ ಪವನ್ ಕಲ್ಯಾಣ್ ಅವರು ತಮ್ಮ ರಾಜ್ಯದ ಉನ್ನತ ಅರಣ್ಯಾಧಿಕಾರಿಗಳೊಂದಿಗೆ ಕರ್ನಾಟಕಕ್ಕೆ ಆಗಮಿಸಿದ್ದಾರೆ ಎಂದರು.

ಸುಮಾರು ಒಂದು ಗಂಟೆಗಳ ಕಾಲ ಎರಡೂ ರಾಜ್ಯಗಳ ಅರಣ್ಯಾಧಿಕಾರಿಗಳೊಂದಿಗೆ ಉತ್ತಮ ಮತ್ತು ಉಪಯುಕ್ತ, ಫಲಪ್ರದವಾದ ಚರ್ಚೆ ನಡೆದಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಖಂಡ್ರೆ ತಿಳಿಸಿದರು.

ರಾಜ್ಯ ಇದೇ 12ರಂದು ವಿಶ್ವ ಆನೆಯ ದಿನದಂದು ಮಾನವ- ಆನೆ ಸಂಘರ್ಷ ನಿರ್ವಹಣೆ ಕುರಿತಂತೆ ಜಿಕೆವಿಕೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನವನ್ನೇ ಆಯೋಜಿಸಿದೆ. ಈ ಸಮ್ಮೇಳನದಲ್ಲಿ ಉತ್ತಮ ರೂಢಿಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದರು.

ಕರ್ನಾಟಕದಲ್ಲಿ ನಡೆಯುವ ಮೈಸೂರು ದಸರಾ ಮಹೋತ್ಸವದಲ್ಲಿ ಆನೆಗಳೇ ಪ್ರಧಾನ ಆಕರ್ಷಣೆ. ಮೈಸೂರು ದಸರಾದಲ್ಲಿ ವಿಜಯದಶಮಿಯ ದಿನ ನಡೆಯುವ ಜಂಬೂಸವಾರಿ ವಿಶ್ವ ವಿಖ್ಯಾತವಾಗಿದೆ. ಇದಕ್ಕಾಗಿ ಆನೆಗಳನ್ನು ಕಾಡಿನಿಂದ ನಾಡಿಗೆ ತರುವ ಗಜ ಪಯಣ ಶಾಸ್ತ್ರೋಕ್ತವಾಗಿ ನಡೆಯುತ್ತದೆ. ಇದೇ ಆಗಸ್ಟ್ 21ರಂದು ವೀರನಹೊಸಹಳ್ಳಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಆನೆ ಕಾರ್ಯಾಚರಣೆ ಅಪಾಯಕಾರಿ
ಹಿಂದೆ ಆನೆ ಹಿಡಿಯಲು ಖೆಡ್ಡಾ ತೋಡಲಾಗುತ್ತಿತ್ತು. ಈಗ ಅರೆವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗುತ್ತದೆ. ಇದು ಕೂಡ ಅತ್ಯಂತ ಅಪಾಯಕಾರಿ. ಆನೆ ಕಾರ್ಯಾಚರಣೆ ವೇಳೆ ಆಪಾಯವೂ ಇರುತ್ತದೆ. ಕರ್ನಾಟಕದ ಹೆಸರಾಂತ ಶಾರ್ಪ್ ಶೂಟರ್ ವೆಂಕಟೇಶ್ ಆನೆಗೆ ಅರವಳಿಕೆ ಚುಚ್ಚುಮದ್ದು ನೀಡುವಾಗ ಭೀಮ ಆನೆಗೆ ಬಲಿಯಾಗಿದ್ದು ನಿಮಗೆಲ್ಲಾ ತಿಳಿದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಆನೆ ಸೇರೆ ಹಿಡಿಯುವ ಕೌಶಲ್ಯ, ಪಳಗಿಸುವ ನೈಪುಣ್ಯತೆ ಕರ್ನಾಟಕದ ಮಾವುತರಲ್ಲಿದೆ. ಹೀಗಾಗಿಯೇ ಭಾರತದ ಇತರ ರಾಜ್ಯಗಳು ಪಳಗಿಸಿದ ಕುಮ್ಕಿ ಆನೆಗಳನ್ನು ನೀಡುವಂತೆ ಬೇಡಿಕೆ ಸಲ್ಲಿಸುತ್ತಿರುತ್ತಾರೆ.

ರಾಜ್ಯದಿಂದ ಹಿಂದೆಯೂ ಆನೆ ನೀಡಿದ್ದೇವೆ
ಈ ಹಿಂದೆ ಕೂಡ ರಾಜ್ಯದಿಂದ ಸಾಕಷ್ಟು ಆನೆಗಳನ್ನು ಇತರ ರಾಜ್ಯಗಳಿಗೆ ಕಳುಹಿಸಲಾಗಿದೆ. 2016-17ರಲ್ಲಿ ಉತ್ತರ ಖಂಡಕ್ಕೆ ಕರ್ನಾಟಕದಿಂದ 11 ಆನೆ ನೀಡಲಾಗಿತ್ತು. ಅದೇ ವರ್ಷ ಛತ್ತೀಸಗಡಕ್ಕೆ 6 ಮತ್ತು ಜಾರ್ಖಂಡ್ ಗೆ 3 ಆನೆ ನೀಡಲಾಗಿತ್ತು. 18-19ರಲ್ಲಿ ಪಶ್ಚಿಮ ಬಂಗಾಳಕ್ಕೆ 8 ಆನೆ, ಬಿಹಾರಕ್ಕೆ 4, ಉತ್ತರ ಪ್ರದೇಶಕ್ಕೆ 12 ಆನೆ ಕಳುಹಿಸಲಾಗಿತ್ತು. 2022-23ರಲ್ಲಿ ಉತ್ತರ ಪ್ರದೇಶಕ್ಕೆ 4, ಮಧ್ಯಪ್ರದೇಶಕ್ಕೆ 14, ಮಹಾರಾಷ್ಟ್ರಕ್ಕೆ 3 ಆನೆ ಕಳುಹಿಸಲಾಗಿತ್ತು. ಅದರಲ್ಲಿ ಒಂದು ಆನೆ ಮಹಾರಾಷ್ಟ್ರದ್ದೇ ಆಗಿದ್ದು, ಇಲ್ಲಿ ಅದಕ್ಕೆ ತರಬೇತಿ ನೀಡಲಾಗಿತ್ತು. ಆನೆಗಳನ್ನು ಇತರ ರಾಜ್ಯಗಳಿಗೆ ನೀಡುವುದು ಒಂದು ಸಾಮಾನ್ಯ ಪ್ರಕ್ರಿಯೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಕೌಶಲ್ಯ ವರ್ಗಾವಣೆ
ಇಂದು ನಾವು ಇತರ ರಾಜ್ಯಗಳಿಗೆ ಪಳಗಿಸಿದ ಆನೆ ನೀಡುವುದರ ಜೊತೆಗೆ ಅಲ್ಲಿನ ಮಾವುತರಿಗೆ, ಕಾವಾಡಿಗರಿಗೆ ಕೌಶಲ್ಯ ವರ್ಗಾವಣೆ ಮಾಡುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದರು.
ಆಂಧ್ರಪ್ರದೇಶವೇ ಇರಲಿ, ಮಹಾರಾಷ್ಟ್ರವೇ ಆಗಿರಲಿ, ಅವರಿಗೆ ನಮ್ಮಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ನಿಮ್ಮ ರಾಜ್ಯದಿಂದ ಪಶುವೈದ್ಯರು, ಮಾವುತರು, ಕಾವಾಡಿಗರು ಮತ್ತು ಅಧಿಕಾರಿಗಳ ತಂಡವನ್ನು ಕಳುಹಿಸಿ ಎಂದು ತಿಳಿಸಲಾಗುತ್ತದೆ. ಅವರು ಆನೆ ಸೆರೆ ಕಾರ್ಯಾಚರಣೆ ಕಣ್ಣಾರೆ ಕಾಣಲು ಇದರಿಂದ ಸಾಧ್ಯವಾಗುತ್ತದೆ.

ಬಳಿಕ ಹಿಡಿದ ಆನೆಗಳನ್ನು ಹೇಗೆ ಪಳಗಿಸಲಾಗುತ್ತದೆ ಎಂಬುದನ್ನೂ ಅವರು ಪ್ರತ್ಯಕ್ಷ ನೋಡುತ್ತಾರೆ. ಹೊರ ರಾಜ್ಯದ ಮಾವುತರಿಗೂ ಆ ಆನೆಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಯುತ್ತದೆ. ಆಗ ಮುಂದಿನ ಕಾರ್ಯಾಚರಣೆಯನ್ನು ಅವರೇ ನಿರ್ವಹಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾನು ಇಂದಿನ ಸಭೆಯಲ್ಲಿ ಸಲಹೆ ನೀಡಿದ್ದೇನೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

7 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

10 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

11 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

12 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

13 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

18 hours ago